ಮೈಸೂರು : ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಕುಸುಮ ಅವರು ಮಾಹಿತಿ ನೀಡಿದ್ದು, 2024-25ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಾಯಿಸಿದ್ದ ಕೆಲವು ಅರ್ಜಿಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೆಳೆ ಸಮೀಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ನಡೆಸಿದ ಬಳಿಕ ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕಸಬಾ ಹೋಬಳಿಯಲ್ಲಿ 73, ಬೆಟ್ಟದಪುರ ಹೋಬಳಿಯಲ್ಲಿ 47, ರಾವಂದೂರು ಹೋಬಳಿಯಲ್ಲಿ 49 ಹಾಗೂ ಹಾರನಹಳ್ಳಿ ಹೋಬಳಿಯಲ್ಲಿ 66 ಪ್ರಕರಣಗಳು ಸೇರಿದಂತೆ ಒಟ್ಟು 235 ಅರ್ಜಿಗಳು ತಿರಸ್ಕೃತಗೊಂಡಿವೆ.ತಿರಸ್ಕೃತ ಪಟ್ಟಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಿತ ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಕ್ಷೇಪಣೆ ಸಲ್ಲಿಸಲು ರೈತರು 2024-25ನೇ ಸಾಲಿನ ಪಹಣಿ, ವಿಮೆಗೆ ನೋಂದಾಯಿಸಿದ ಬೆಳೆ ವಿವರಗಳಿರುವ ದಾಖಲೆಗಳು ಹಾಗೂ ಬೆಳೆ ಉತ್ಪನ್ನ ಮಾರಾಟದ ರಶೀದಿಯನ್ನು ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜೂನ್ 1ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.