ಮೈಸೂರು :56,342 ಖಾಲಿ ಹುದ್ದೆಗಳ ಭರ್ತಿಯಲ್ಲಿ 15% ಒಳಮೀಸಲಾತಿಯನ್ನು ಗ್ರೂಪ್ ಎಬಿಸಿ ವರ್ಗೀಕರಣದಂತೆ ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಒಳಮೀಸಲಾತಿ ಕಲ್ಪಿಸಬೇಕು ಎಂದು ಡಾ. ಬಾಬು ಜಗಜೀವನರಾಂ ಸಾಮಾಜಿಕ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಎಂ.ಎನ್. ಆದಿಶೇಷ ಆಗ್ರಹಿಸಿದರು.
ಪಿರಿಯಾಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿರುವುದು ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ನ್ಯಾಯವಾಗಿದೆ ಎಂದು ಹೇಳಿದರು. ಈ ಹೋರಾಟವು ಸಂವಿಧಾನದ ವಿಧಿ 15(4) ಮತ್ತು 16(4)ಗಳ ಆತ್ಮವನ್ನು ಉಳಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದರು.ಆದರೆ, ಫೆಬ್ರವರಿ 26, 2026ರ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ, ಶೇಕಡಾ 15 ಪರಿಶಿಷ್ಟ ಜಾತಿ ಹಾಗೂ ಶೇಕಡಾ 3 ಪರಿಶಿಷ್ಟ ಪಂಗಡ ಮೀಸಲಾತಿ ಮತ್ತು ರೋಸ್ಟರ್ ಮಾರ್ಗಸೂಚಿಗಳ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚಿಸಲಾಗಿದೆ.
ರಾಜ್ಯದಲ್ಲಿರುವ 56,342 ಖಾಲಿ ಹುದ್ದೆಗಳ ಭರ್ತಿಯನ್ನು ಒಳಮೀಸಲಾತಿಯ 15% ಹಂಚಿಕೆಯನ್ನು ಸ್ಪಷ್ಟವಾಗಿ ಅನ್ವಯಿಸಿ ಮಾತ್ರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಒಟ್ಟು ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿರುವ ವಿಚಾರದಲ್ಲಿ ಸರ್ಕಾರವು ನ್ಯಾಯಾಲಯದ ಮುಂದೆ ಸಂವಿಧಾನಾತ್ಮಕ ಹಾಗೂ ಕಾನೂನು ಆಧಾರದ ಮೇಲೆ ಸಮಗ್ರವಾಗಿ ವಾದ ಮಂಡಿಸಬೇಕು. ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟು ಪರಿಶಿಷ್ಟ ಜಾತಿಗಳಿಗೆ 20 ಹಾಗೂ ಪರಿಶಿಷ್ಟ ಪಂಗಡಗಳಿಗೆ 48 ಹುದ್ದೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಿ ಭರ್ತಿ ಮಾಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಘಟನಾ ಕಾರ್ಯದರ್ಶಿ ಕುಮಾರ್, ಸಹ ಕಾರ್ಯದರ್ಶಿ ನಾಗೇಂದ್ರ, ನಿರ್ದೇಶಕರಾದ ಬಿಜೆ ಸೋಮಣ್ಣ ಮತ್ತು ಬಿಎಸ್ ವಿಜಯ್ ಕುಮಾರ್ ಉಪಸ್ಥಿತರಿದ್ದರು.