ಯಲ್ಲಾಪುರ: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಮೀಪದ ಉದ್ಯಾನದಲ್ಲಿ ಕಳೆದ ಕೆಲವು ದಿನಗಳಿಂದ ಅಪರಿಚಿತ ವ್ಯಕ್ತಿಯೊಬ್ಬ ತಂಗಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಸುಮಾರು 35 ವರ್ಷದ ವ್ಯಕ್ತಿ ಎನ್ನಲಾಗಿರುವ ಈತ, ಉದ್ಯಾನಕ್ಕೆ ಬರುವವರೊಂದಿಗೆ, ವಿಶೇಷವಾಗಿ ಹೆಣ್ಣುಮಕ್ಕಳೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದಾನೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಈ ಬಗ್ಗೆ ಸಂಬಂಧಿತ ಇಲಾಖೆಗೆ ಸ್ಥಳೀಯರು ಈಗಾಗಲೇ ಮಾಹಿತಿ ನೀಡಿದ್ದರೂ, ಇನ್ನೂ ಕ್ರಮ ಕೈಗೊಳ್ಳಲಾಗಿಲ್ಲವೆಂದು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ, ಸದರಿ ವ್ಯಕ್ತಿಯಿಂದ ಯಾವುದೇ ಅನಾಹುತ ಸಂಭವಿಸಬಹುದೆಂಬ ಆತಂಕ ವ್ಯಕ್ತವಾಗಿದ್ದು, ಪಟ್ಟಣ ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.