ಧಾರವಾಡ: ಜಿಲ್ಲೆಯ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಸುಮಾರು ಹತ್ತು ವರ್ಷಗಳ ವಿಚಾರಣೆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.
2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಬಳಿಕ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ವಿಚಾರಣೆಯ ಅವಧಿಯಲ್ಲಿ 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿ ಹಲವು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದು, ಕೆಲವರಿಗೆ ಅನುಮಾನ ಲಾಭದ ಆಧಾರದಲ್ಲಿ ವಿಮುಕ್ತಿ ನೀಡಿದೆ. ತೀರ್ಪಿನ ಬಳಿಕ ನ್ಯಾಯಾಲಯವೇ ಸಿಬಿಐ ಅಧಿಕಾರಿಗಳಿಗೆ ದೋಷಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ.
ಇಷ್ಟು ದಿನ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿ ಇದೀಗ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕ್ಷೆಯ ಪ್ರಮಾಣದ ಕುರಿತು ಏಪ್ರಿಲ್ 16ರಂದು ವಾದ ಮಂಡನೆ ನಡೆಯಲಿದ್ದು, ಬಳಿಕ ಅಂತಿಮ ಶಿಕ್ಷೆಯನ್ನು ನ್ಯಾಯಾಲಯ ಪ್ರಕಟಿಸಲಿದೆ.