ಕಾರವಾರ:ಜಾಗತಿಕ ಇಂಧನ ಪೂರೈಕೆಗೆ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಿಂದ ಉಂಟಾಗಿರುವ ಪರಿಣಾಮಗಳನ್ನು ಮನಗಂಡು, ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶದಿಂದ ಅಡುಗೆ ಹಾಗೂ ಬೆಳಕಿನ ಬಳಕೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಮೂಲಕ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುಮೋದನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿನ 639 ಅನಿಲ ರಹಿತ ಪಡಿತರ ಚೀಟಿದಾರರಿಗೆ ಹಾಗೂ ಗ್ರಾಮಾಂತರ ಪ್ರದೇಶದ ಒಪ್ಪಿಗೆ ನೀಡಿರುವ 1,89,086 ಅನಿಲ ಪಡಿತರ ಚೀಟಿದಾರರಿಗೆ ಏಪ್ರಿಲ್ 2026 ತಿಂಗಳಿಗೆ ಪ್ರತಿ ಪಡಿತರ ಚೀಟಿಗೆ 3 ಲೀಟರ್ ಸೀಮೆಎಣ್ಣೆ ಹಂಚಿಕೆ ಮಾಡಲು ಆದೇಶಿಸಲಾಗಿದೆ.
ಅದರಂತೆ ಜಿಲ್ಲೆಯ ಅನಿಲ ರಹಿತ ಪಡಿತರ ಕಾರ್ಡುಗಳಿಗೆ ಹಾಗೂ ಗ್ರಾಮಾಂತರ ಪ್ರದೇಶದ ಒಪ್ಪಿಗೆ ನೀಡಿರುವ ಅನಿಲ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 3 ಲೀಟರ್ ಸೀಮೆಎಣ್ಣೆ ಮರುಹಂಚಿಕೆ ಮಾಡಲಾಗುತ್ತಿದೆ. ಅರ್ಹ ಪಡಿತರ ಚೀಟಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಸೀಮೆಎಣ್ಣೆಯನ್ನು ಕಡಿಮೆ ಪ್ರಮಾಣದಲ್ಲಿ ವಿತರಿಸುತ್ತಿರುವುದು ಕಂಡುಬಂದಲ್ಲಿ ಅಥವಾ ಇಂತಹ ಯಾವುದೇ ದೂರುಗಳು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಪಡಿತರ ಚೀಟಿದಾರರಿಗೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತಮ್ಮ ತಾಲೂಕಿನ ಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರು ಅಥವಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು, ಕಾರವಾರ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.