ಯಲ್ಲಾಪುರ: ಸರ್ಕಾರ ಬಸವಣ್ಣರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿ ಪ್ರತಿಯೊಂದು ಕಚೇರಿಯಲ್ಲಿ ಅವರ ಭಾವಚಿತ್ರವನ್ನು ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳು “ಕಾಯಕವೇ ಕೈಲಾಸ” ಎಂಬ ಬಸವಣ್ಣನವರ ಆದರ್ಶವನ್ನು ತಮ್ಮ ಕಾರ್ಯಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಹೇಳಿದರು.
ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ತಾಲೂಕು ಆಡಳಿತ, ತಾ.ಪಂ, ವೀರಶೈವ ಲಿಂಗಾಯತ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತೆ ಪ್ರಭಾವತಿ ಗೋವಿ, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಚಾರದಲ್ಲಿ ಇನ್ನೂ ಗೊಂದಲ ಮುಂದುವರಿದಿರುವುದು ವಿಷಾದನೀಯ. ಆದರೆ ಬಸವಣ್ಣರು 12ನೇ ಶತಮಾನದಲ್ಲೇ ಅನುಭವ ಮಂಟಪವನ್ನು ಸ್ಥಾಪಿಸಿ ಅಕ್ಕ ಮಹಾದೇವಿ ಸೇರಿದಂತೆ ಮಹಿಳೆಯರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವ ಮೂಲಕ ಸಮಾನತೆಯ ಸಂದೇಶ ಸಾರಿದ್ದರು ಎಂದು ಹೇಳಿದರು.
ಈ ಸನ್ಮಾನದಿಂದ ಮತ್ತಷ್ಟು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ದೊರೆತಿದೆ ಎಂದರು.
ಈ ಸಂದರ್ಭದಲ್ಲಿ ಪ್ರಭಾವತಿ ಗೋವಿ ಅವರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಸಂಘಟನೆಯ ಪ್ರಮುಖ ಸಿದ್ಧಾರ್ಥ ನಂದೊಳ್ಳಿಮಠ ಬಸವೇಶ್ವರರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ಕೆ.ಎಸ್. ಫರ್ನಾಂಡಿಸ್, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸಂಜೀವ ಕುಮಾರ ಹೊಸ್ಕೆರಿ, ಮಹೇಶಗೌಳಿ, ಗುರುಪಾದಯ್ಯ ನಂದೊಳ್ಳಿಮಠ, ಜಯರಾಜ್, ಗೀತಾ ಜಾಧವ, ನಾಗೇಶ ಮಲಮೇತ್ರಿ, ಎಫ್.ಎಚ್. ಬಾಸುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಲೆಕ್ಕಾಧಿಕಾರಿ ಶ್ರೀಧರ ಮಡಿವಾಳ ಕಾರ್ಯಕ್ರಮ ನಿರ್ವಹಿಸಿದರು.