ಯಲ್ಲಾಪುರ: ತಾಲೂಕಿನ ಅರಬೈಲ್ ಗ್ರಾಮದ ಕಸಬೆಯ ಶ್ರೀ ಶೇಡಿಕೆರೆ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ, ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸುಣಜೋಗ, ಕೋಮಡಿ ಗ್ರಾಮದ ನಿವಾಸಿ ಶಿವರಾಮ ಕೃಷ್ಣ ಭಟ್ಟ ಅವರು ನೀಡಿದ ದೂರಿನ ಪ್ರಕಾರ, ಏಪ್ರಿಲ್ 18ರ ಸಂಜೆಯಿಂದ ಏಪ್ರಿಲ್ 19ರ ಬೆಳಿಗ್ಗೆ ನಡುವೆ ದೇವಸ್ಥಾನದ ಗರ್ಭಗುಡಿ ಹಾಗೂ ಪಕ್ಕದ ಕೊಠಡಿಗಳ ಬೀಗಗಳನ್ನು ಒಡೆದು ಒಳನುಗ್ಗಿದ ಕಳ್ಳರು ಹಿತ್ತಾಳೆ ಗಂಟೆಗಳು, ತಾಮ್ರದ ಕೊಡ, ಆರತಿ, ದೀಪಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕಳವು ಮಾಡಿದ್ದರು. ಒಟ್ಟು ಸುಮಾರು 19,900 ರೂ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದವು.
ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮುಂದುವರೆಸಿದ ಪೊಲೀಸರು, ಏಪ್ರಿಲ್ 22ರಂದು ಖಚಿತ ಮಾಹಿತಿ ಮೇರೆಗೆ ಯಲ್ಲಾಪುರದ ಅಂಬೇಡ್ಕರ ನಗರ ನಿವಾಸಿ ಕೃಷ್ಣಾನಂದ (28) ಎಂಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಆರೋಪಿಯು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ.
ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಓಮ್ನಿ ವಾಹನ ಸೇರಿದಂತೆ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ಸುಮಾರು 1,19,900 ರೂ ಆಗಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಡಿವೈಎಸ್ಪಿ ಗೀತಾ ಪಾಟೀಲ್ ಅವರ ನಿರ್ದೇಶನದಡಿ, ಯಲ್ಲಾಪುರ ಪೊಲೀಸ್ ಠಾಣೆಯ ಪಿಐ ರಮೇಶ್ ಹಾನಾಪುರ ನೇತೃತ್ವದಲ್ಲಿ ಪಿಎಸ್ಐ ರಾಜಶೇಖರ ವಂದಲಿ, ಮಹಾವೀರ ಕಾಂಬಳೆ, ಶೇಡಜಿ ಚೌಹಾಣ ಸೇರಿದಂತೆ ಬಸವರಾಜ ಹಗರಿ, ಮಹಾವೀರ ಡಿ.ಎಸ್, ಮಹಾಂತೇಶ ಕಡಪಟ್ಟಿ, ಪರಮೇಶ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.
ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.