ಯಲ್ಲಾಪುರ: ತಾಲೂಕಿನಾದ್ಯಂತ ಎಲ್ಎಸ್ಎಂಪಿ ಎಂದೇ ಪ್ರಸಿದ್ಧಿ ಪಡೆದಿರುವ ಯಲ್ಲಾಪುರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ತನ್ನ ವಜ್ರಮಹೋತ್ಸವವನ್ನು ಮೇ 12ರಂದು ಆಚರಿಸಿಕೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ನಾಗರಾಜ ಕವಡಿಕೇರಿ ತಿಳಿಸಿದರು.
ಶನಿವಾರ ಸಂಘದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, 1950ರಲ್ಲಿ ಕೇವಲ 10 ಸದಸ್ಯರು ಹಾಗೂ 1330 ರೂ. ಷೇರು ಬಂಡವಾಳದೊಂದಿಗೆ ಆರಂಭವಾದ ಸಂಘವು ಇಂದು 3500ಕ್ಕೂ ಅಧಿಕ ಸದಸ್ಯ ಬಲ ಹೊಂದಿ 75ನೇ ವರ್ಷದ ಸಂಭ್ರಮಕ್ಕೆ ಕಾಲಿಟ್ಟಿದೆ. ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಸಂಘ ನಿರಂತರ ಬೆಳವಣಿಗೆ ಕಂಡಿದೆ ಎಂದರು.
ಮೇ 12ರಂದು ಬೆಳಿಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದು, ಸಭಾಭವನವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ. ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸಭಾಂಗಣ ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಂಘದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಶ್ರೀ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳವರ ದಿವ್ಯ ಸಾನ್ನಿಧ್ಯವಿರಲಿದೆ.
ರಾತ್ರಿ 8.30ಕ್ಕೆ ಅನಂತ ಪದ್ಮನಾಭ ಯಕ್ಷಗಾನ ಮಂಡಳಿ ಹಾಗೂ ಅತಿಥಿ ಕಲಾವಿದರಿಂದ “ಚಂದ್ರಹಾಸ ಚರಿತ್ರೆ” ಮತ್ತು “ಮಾಯಾ ಮೃಗಾವತಿ” ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಟಿ.ಆರ್. ಹೆಗಡೆ, ನಿರ್ದೇಶಕರಾದ ಅಪ್ಪು ಆಚಾರಿ, ಮಹಾಬಲೇಶ್ವರ ನಾಗಭಟ್ಟ, ಗ್ಯಾಬ್ರಿಯಲ್ ಫರ್ನಾಂಡೀಸ್, ಸುಬ್ಬಣ್ಣ ದಾನ್ಯಾಕೊಪ್ಪ, ಗಣಪತಿ ಕವಡಿಕೇರಿ, ಗೋಪಾಲಕೃಷ್ಣ ರಾ. ಬಾಳೆಗದ್ದೆ, ತಿಮ್ಮಣ್ಣ ಘಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಎಂ.ಎಸ್. ಹೆಗಡೆ ಉಪಸ್ಥಿತರಿದ್ದರು.