ಮೈಸೂರು: ದೇಶದ ರೈತರಿಗೆ ನೈಋತ್ಯ ಮುಂಗಾರು ಆರಂಭಕ್ಕೂ ಮುನ್ನವೇ ಕೇಂದ್ರ ಸರ್ಕಾರ ಮಹತ್ವದ ಉಡುಗೊರೆಯನ್ನು ನೀಡಿದ್ದು, ರಾಗಿ ಸೇರಿದಂತೆ 14 ಪ್ರಮುಖ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸಿರುವ ಕ್ರಮ ರೈತಪರ ನಿರ್ಧಾರವಾಗಿದೆ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಒಬಿಸಿ ಜಿಲ್ಲಾಧ್ಯಕ್ಷ ಎಂ.ಎಂ ರಾಜೇಗೌಡ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಭತ್ತ, ರಾಗಿ, ಹತ್ತಿ, ತೊಗರಿ, ಜೋಳ, ಎಣ್ಣೆಕಾಳುಗಳು ಸೇರಿದಂತೆ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಬೆಳೆಯಾದ ರಾಗಿಗೆ ಬೆಂಬಲ ಬೆಲೆ ಹೆಚ್ಚಿಸಿರುವುದು ರೈತರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಿದ್ದು, ವಿಶೇಷವಾಗಿ ಮಳೆಆಧಾರಿತ ಕೃಷಿ ಮಾಡುವ ರೈತರಿಗೆ ಇದು ಹೆಚ್ಚಿನ ನೆರವಾಗಲಿದೆ ಎಂದು ತಿಳಿಸಿದ್ದಾರೆ.ದ್ವಿದಳ ಧಾನ್ಯಗಳು, ಎಣ್ಣೆಬೀಜಗಳು ಹಾಗೂ ಹತ್ತಿ ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿರುವುದು ದೇಶದ ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಜೊತೆಗೆ ಕೃಷಿಯಲ್ಲಿ ಬೆಳೆ ವೈವಿಧ್ಯೀಕರಣಕ್ಕೂ ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರೈತರಿಗೆ ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯಲಿದ್ದು, ಕೃಷಿ ಕ್ಷೇತ್ರದಲ್ಲಿ ಆರ್ಥಿಕ ಸ್ಥಿರತೆ ಹೆಚ್ಚಲಿದೆ. ರೈತರ ಪರ ಕಾಳಜಿ ಹೊಂದಿರುವ ಕೇಂದ್ರ ಸರ್ಕಾರದ ಈ ಕ್ರಮ ಶ್ಲಾಘನೀಯವಾಗಿದೆ ಎಂದು ಎಂ.ಎಂ ರಾಜೇಗೌಡ ತಿಳಿಸಿದ್ದಾರೆ.