ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯಡಿ 50 ಟನ್ ಸಾಮರ್ಥ್ಯದ ಮಂಜುಗಡ್ಡೆ ಸ್ಥಾವರ ನಿರ್ಮಾಣ, ಅಕ್ವೇರಿಯಂ ಮತ್ತು ಅಲಂಕಾರಿಕ ಮೀನುಗಳ ಕಿಯೋಸ್ಕ್ಗಳು ಸೇರಿದಂತೆ ಮೀನು ಕಿಯೋಸ್ಕ್ ನಿರ್ಮಾಣ, 10 ಟನ್ ಸಾಮರ್ಥ್ಯದ ಶಾಖ ನಿರೋಧಕ ವಾಹನ ಖರೀದಿ, ಮಂಜುಗಡ್ಡೆ ಸ್ಥಾವರ ನವೀಕರಣ, ದ್ವಿಚಕ್ರ ವಾಹನ ಹಾಗೂ ಐಸ್ಬಾಕ್ಸ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ.
ಇದಲ್ಲದೆ, ಆಳ ಸಮುದ್ರ ಮೀನುಗಾರಿಕೆ ದೋಣಿ ನಿರ್ಮಾಣಕ್ಕೂ ಸಹಾಯಧನ ಸೌಲಭ್ಯ ಕಲ್ಪಿಸಲಾಗಿದೆ.
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60ರಷ್ಟು ಸಹಾಯಧನ ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಮೇ. 30ರೊಳಗಾಗಿ ಸಂಬಂಧಪಟ್ಟ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕಾರವಾರ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.