ಕಾರವಾರ: ನಗರದ ಕಣಸಗಿರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಓಡಾಡುತ್ತಾ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರತೆ ಕಾಣಿಸಿಕೊಂಡ ಬಳಿಕ ಗ್ರಾಮಸ್ಥರು ಆತಂಕದಲ್ಲಿ ದಿನ ಕಳೆಯುತ್ತಿದ್ದರು. ಸಾಕು ನಾಯಿಗಳ ಮೇಲೆ ದಾಳಿ ನಡೆಸಿದ್ದಲ್ಲದೇ, ಜಾನುವಾರುಗಳಿಗೂ ಹಾನಿ ಉಂಟುಮಾಡಿದ್ದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು.
ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿ, ಅದು ಸಂಚರಿಸುತ್ತಿದ್ದ ದಾರಿಯಲ್ಲಿ ಬೋನು ಅಳವಡಿಸಿತ್ತು. ಮಂಗಳವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದ್ದು, ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಚಿರತೆ ಸೆರೆ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆಯೇ ಕನಸಗಿರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಸ್ಥಳಕ್ಕೆ ಆಗಮಿಸಿ ಬೋನಿನಲ್ಲಿದ್ದ ಚಿರತೆಯನ್ನು ವೀಕ್ಷಿಸಿದರು.