ಮೈಸೂರು : ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ನಡವಳಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿರುವ ಕಾರಣದಿಂದಲೇ ಪೋಷಕರು ತಮ್ಮ ಮಕ್ಕಳನ್ನು ಎಸ್.ಎಂ.ಎಸ್ ವಿದ್ಯಾಸಂಸ್ಥೆಗೆ ಸೇರಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ಹೇಳಿದರು.
ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಎಸ್.ಎಂ.ಎಸ್ ವಿದ್ಯಾಸಂಸ್ಥೆಯಲ್ಲಿ ಗುರುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಮಕ್ಕಳ ಭವಿಷ್ಯ ಉಜ್ವಲವಾಗಲು ಪಾಠದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣವೂ ಅಗತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಬೇಕಾದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವಾತಾವರಣವನ್ನು ಎಸ್.ಎಂ.ಎಸ್ ಸಂಸ್ಥೆ ನಿರ್ಮಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ವಿ. ಮಂಜುನಾಥ್ ಮಾತನಾಡಿ, “ನಮ್ಮ ವರ್ತನೆ ಸಮಾಜದಲ್ಲಿ ಗೌರವದಿಂದ ಗುರುತಿಸಿಕೊಳ್ಳುವ ಮಟ್ಟಿಗೆ ಬೆಳೆಯಬೇಕು. ಅಂತಹ ಮೌಲ್ಯಯುತ ಬದುಕನ್ನು ಕಟ್ಟಿಕೊಡುವ ಶಕ್ತಿ ಶಿಕ್ಷಣದಲ್ಲಿದೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ” ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂಜಾ ಮಾತನಾಡಿ, ವಿದ್ಯಾರ್ಥಿನಿಯರು ಜೀವನಕ್ಕೆ ಅಗತ್ಯವಾಗುವ ಆಹಾರ, ಉಡುಪು ಸೇರಿದಂತೆ ದಿನನಿತ್ಯದ ಅವಶ್ಯಕ ವಸ್ತುಗಳನ್ನು ಸ್ವಂತ ಪರಿಶ್ರಮದಿಂದ ಸಂಪಾದಿಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಡಿ. ಮಂಜುನಾಥ್ ಮಾತನಾಡಿದರು.
ಇದೇ ವೇಳೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಸ್ಥೆಯ ಕಾರ್ಯದರ್ಶಿ ಎ.ವಿ. ಛಾಯಾ, ಇಶಾ ಫೌಂಡೇಶನ್ ಸ್ವಯಂಸೇವಕಿ ಸುಜಾತ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕ ಎಸ್.ಆರ್. ವೆಂಕಟೇಶ್, ಕುಮಾರ್, ಉಪನ್ಯಾಸಕ ಸತೀಶ್, ಯಶವಂತ್, ಕುಬೇರ್, ಶಿವಕುಮಾರ್, ರಾಮೇಗೌಡ, ಬಸವರಾಜು, ಹರ್ಷಿತಾ, ಸುನಿಲ್, ಪ್ರತಾಪ್, ವಸಂತ್, ಶಿಕ್ಷಕರಾದ ಅಂದಾನಯ್ಯ, ರೂಪಾ, ಅಭಿಲಾಶ್, ಎಸ್.ಬಿ. ಸತೀಶ್ ಸೇರಿದಂತೆ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.