ಶಿರಸಿ/ಬೆಂಗಳೂರು: ರಾಜ್ಯದಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಸಾಗುವಳಿ ಪ್ರದೇಶ ಹೊಂದಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದೆಂಬ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ, ಅರಣ್ಯವಾಸಿಗಳ ಪರವಾಗಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಚಿವ H. K. Patil ಭರವಸೆ ನೀಡಿರುವುದಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಹೈಕೋರ್ಟ್ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ವಿವರಿಸಿದ ವೇಳೆ ಸಚಿವರು ಈ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಹೋರಾಟದ ಹಿನ್ನೆಲೆಯಲ್ಲಿ ಅಂದಿನ ವಿಧಾನಸಭಾಧ್ಯಕ್ಷ Kagodu Thimmappa, ಮುಖ್ಯಮಂತ್ರಿ Siddaramaiah ಹಾಗೂ ಮಾಜಿ ಸಚಿವ R. V. Deshpande ಅವರ ವಿಶೇಷ ಆಸಕ್ತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಹಾಗೂ ಪಟ್ಟಾ ಭೂಮಿ ಹೊಂದಿರುವವರನ್ನು ಸರ್ಕಾರದ ಮುಂದಿನ ಆದೇಶದವರೆಗೆ ಒಕ್ಕಲೆಬ್ಬಿಸಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಎಂದು ತಿಳಿಸಿದರು.
ಈ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ರಾಜ್ಯ ಸರ್ಕಾರ ಅರಣ್ಯ ಭೂಮಿ ಸಾಗುವಳಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಹಾಗೂ ರಾಜ್ಯ ಸರ್ಕಾರದ ಆದೇಶ ಕಾನೂನುಬಾಹಿರ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ ಎಂಬ ಅಂಶವನ್ನು ಸಚಿವರ ಗಮನಕ್ಕೆ ತರಲಾಗಿದೆ ಎಂದು ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅರಣ್ಯವಾಸಿಗಳ ಪರವಾಗಿರುವ ಈ ಆದೇಶ ರದ್ದಾದರೆ ನೈಜ ಅರಣ್ಯವಾಸಿಗಳಿಗೆ ಸಾಗುವಳಿ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ, ಹೋರಾಟಗಾರರ ವೇದಿಕೆ ಹೈಕೋರ್ಟ್ನಲ್ಲಿ ಅವಶ್ಯ ಪಕ್ಷಗಾರರಾಗಿ ಸೇರ್ಪಡೆಗೊಳ್ಳಲು ನಿರ್ಧರಿಸಿದೆ ಎಂಬ ವಿಷಯವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.