Saturday, May 30, 2026
HomeStateಹೈಕೋರ್ಟ್ ಮೆಟ್ಟಿಲೇರಿದ ʻಗೃಹಲಕ್ಷ್ಮಿ?ʼ

ಹೈಕೋರ್ಟ್ ಮೆಟ್ಟಿಲೇರಿದ ʻಗೃಹಲಕ್ಷ್ಮಿ?ʼ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಲ್ಲಿ ಉಂಟಾದ ವಿಳಂಬ ಇದೀಗ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಎರಡು ತಿಂಗಳ ಕಂತು ಫಲಾನುಭವಿಗಳ ಖಾತೆಗೆ ಜಮೆಯಾಗದೇ ಇರುವುದರಿಂದ ಅಸಮಾಧಾನಗೊಂಡ ಇಬ್ಬರು ಮಹಿಳೆಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಅರ್ಜಿಯಲ್ಲಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಹಲವರ ಖಾತೆಗೆ ಬಂದಿಲ್ಲ. ಈ ಯೋಜನೆಯ ಹಣದ ಮೇಲೆಯೇ ಅವಲಂಬಿತವಾಗಿರುವ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಉಲ್ಲೇಖಿಸಲಾಗಿದೆ.

ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್, ರಾಜ್ಯದ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಪ್ರತಿಕ್ರಿಯೆ ಪಡೆಯಲು ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿರುವುದಾಗಿ ತಿಳಿದುಬಂದಿದೆ.

ಈವರೆಗೆ ಯಾವುದೇ ತೊಂದರೆ ಇಲ್ಲದೆ ಹಣ ಜಮೆಯಾಗುತ್ತಿತ್ತು. ಆದರೆ ಯೋಜನೆ ನಿರ್ವಹಣಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿರುವುದು ಹಾಗೂ ಪ್ರಕ್ರಿಯೆಯನ್ನು ತಾಲೂಕು ಪಂಚಾಯಿತಿಗಳ ಮೂಲಕ ನಿರ್ವಹಿಸಲು ಹೊಸ ವ್ಯವಸ್ಥೆ ಜಾರಿಗೆ ತಂದಿರುವುದರಿಂದ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಾವಿರಾರು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ತಲುಪದೇ ಉಳಿದಿದೆ ಎಂಬ ಆರೋಪ ಕೇಳಿಬಂದಿದೆ. ಫಲಾನುಭವಿಗಳಿಗೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಲ್ಲಿ ಇದೀಗ ಹೈಕೋರ್ಟ್ ಕ್ರಮ ಹೊಸ ಆಶಾಭಾವನೆ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Share