Saturday, May 30, 2026
HomeLocal Newsಭಟ್ಕಳ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ 8 ಜನರ ದುರ್ಮರಣ

ಭಟ್ಕಳ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ 8 ಜನರ ದುರ್ಮರಣ

ಭಟ್ಕಳ: ತಾಲೂಕಿನ ತಟ್ಟಿಹಕ್ಕಳ ಸಮೀಪದ ವೆಂಕಟಾಪುರ ನದಿಯಲ್ಲಿ ಭಾನುವಾರ ಸಂಭವಿಸಿದ ಭೀಕರ ದುರಂತ ಇಡೀ ಕರಾವಳಿಯನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಮೂವರು ನಾಪತ್ತೆಯಾಗಿರುವ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಭಾನುವಾರ ರಜೆ ಇರುವ ಹಿನ್ನೆಲೆಯಲ್ಲಿ ಒಟ್ಟು 13 ಜನರಿದ್ದ ತಂಡವೊಂದು ವೆಂಕಟಾಪುರ ನದಿಗೆ ಚಿಪ್ಪು ಸಂಗ್ರಹಿಸಲು ಇಳಿದಿತ್ತು.

ಈ ವೇಳೆ ಏಕಾಏಕಿ ಉಂಟಾದ ಭಾರಿ ನೀರಿನ ಸೆಳೆತಕ್ಕೆ ಸಿಲುಕಿದ ಅವರು ಹೊರಬರಲಾಗದೇ ದುರಂತಕ್ಕೀಡಾದರು. ಮೃತರೆಲ್ಲರೂ ಶ್ರಮಜೀವಿಗಳಾಗಿದ್ದು, ದಿನನಿತ್ಯದ ಬದುಕಿಗಾಗಿ ಕಪ್ಪೆಚಿಪ್ಪು ಸಂಗ್ರಹಣೆಯನ್ನೇ ಅವಲಂಬಿಸಿಕೊಂಡಿದ್ದರು ಎನ್ನಲಾಗಿದೆ. ದುರಂತದಲ್ಲಿ ಸಾವನ್ನಪ್ಪಿದವರು ಹಾಗೂ ನಾಪತ್ತೆಯಾದವರು ಭಟ್ಕಳ ತಾಲೂಕಿನ ಶಾರದಹೊಳೆಯ ಪಡುಶಿರಾಲಿ ಮತ್ತು ಹಿರೆಹಿತ್ಲು ಭಾಗದ ಒಂದೇ ಕುಟುಂಬಕ್ಕೆ ಸೇರಿದವರು ಎಂಬುದು ದೃಢಪಟ್ಟಿದೆ.

ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಇದೇ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ನಾಗರತ್ನ ಈಶ್ವರ ನಾಯ್ಕ ಹಾಗೂ ಮಾದೇವಿ ನಾಯ್ಕ ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆ ಹಾಗೂ ಆರ್‌ಎನ್‌ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆ ಹಾಗೂ ನದಿತೀರದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕದಲ್ಲಿ ಮುಳುಗಿದೆ. ಭಟ್ಕಳದ ಇತಿಹಾಸದಲ್ಲೇ ಇದೊಂದು ಅತ್ಯಂತ ಕರಾಳ ದಿನ ಎಂದು ಸ್ಥಳೀಯರು ಕಣ್ಣೀರಿಟ್ಟಿದ್ದಾರೆ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share