ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಆಗ್ರಹ
ಯಲ್ಲಾಪುರ: ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಜನರ ಅನುಕೂಲಕ್ಕಾಗಿ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಲು ಸರ್ಕಾರ ಮುಂದಾಗಿರುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಉತ್ತರ ಕನ್ನಡ ಜಿಲ್ಲೆಯನ್ನು ಅದರ ವ್ಯಾಪ್ತಿಗೆ ಸೇರಿಸಲು ಹೊರಟಿರುವುದು ಸಮರ್ಥನೀಯವಲ್ಲ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಹಲವು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆ ಧಾರವಾಡ ಸಂಚಾರಿ ಪೀಠದೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಧಾರವಾಡವೇ ಹತ್ತಿರದ ಹಾಗೂ ಅನುಕೂಲಕರ ಕೇಂದ್ರವಾಗಿದೆ.
ಜಿಲ್ಲೆಯ ಕರಾವಳಿ ಭಾಗದ ಭಟ್ಕಳ ತಾಲೂಕನ್ನು ಹೊರತುಪಡಿಸಿದರೆ, ಉಳಿದ ತಾಲೂಕುಗಳ ಜನರಿಗೆ ಮಂಗಳೂರಿಗಿಂತ ಧಾರವಾಡ ಬಹಳ ಹತ್ತಿರದಲ್ಲಿದೆ. ಆದರೆ, ಮಂಗಳೂರಿಗೆ ಸುಮಾರು 290 ಕಿ.ಮೀ. ಕ್ರಮಿಸಬೇಕಾಗುತ್ತದೆ. ಶಿರಸಿ ಮತ್ತು ಸಿದ್ದಾಪುರ ಭಾಗದ ಜನರೂ ಸಹ ವ್ಯಾಜ್ಯಗಳಿಗಾಗಿ ಮಂಗಳೂರಿಗೆ ತೆರಳಬೇಕಾದರೆ ಹೆಚ್ಚುವರಿ ದೂರ, ಸಮಯ ಹಾಗೂ ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ.
ಯಾರನ್ನೋ ತೃಪ್ತಿಪಡಿಸಲು ಮತ್ತೊಬ್ಬರನ್ನು ಸಂಕಷ್ಟಕ್ಕೆ ತಳ್ಳುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬಾರದು. ಜಿಲ್ಲೆಯ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ತೀರ್ಮಾನ ಮಾಡಿದರೆ ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲಿ ತೀವ್ರ ಪ್ರತಿಭಟನೆ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.
ಕೇವಲ ಹೇಳಿಕೆಗಳಿಗೆ ಸೀಮಿತವಾಗದೇ, ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರ ಗಮನಕ್ಕೆ ವಿಷಯವನ್ನು ತೆಗೆದುಕೊಂಡು ಹೋಗಿ ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಪೀಠದ ವ್ಯಾಪ್ತಿಯಿಂದ ಹೊರಗಿಡಲು ಕ್ರಮ ಕೈಗೊಳ್ಳಬೇಕು ಎಂದು ರಾಮು ನಾಯ್ಕ ಒತ್ತಾಯಿಸಿದ್ದಾರೆ.
ಈ ವಿಷಯದಲ್ಲಿ ಜಿಲ್ಲೆಯ ಜನರು ಜನಪ್ರತಿನಿಧಿಗಳೊಂದಿಗೆ ಇದ್ದಾರೆ. ಆದರೂ ನ್ಯಾಯ ಸಿಗದಿದ್ದರೆ ಸಾರ್ವಜನಿಕರು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.