ಅಂಕೋಲಾ: ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಬಸ್ ಚಾಲಕನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ (ಜಿಎ-08/ವಿ-8719) ಚಾಲಕ ಮಹ್ಮದ್ ಅಕೀಯಾಜ್ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ.
ಆನೆಗುಂದಿ (ಕೊಪ್ಪಳ) ನಿವಾಸಿ ರಾಘವೇಂದ್ರ ದೊಡ್ಡನಾರಾಯಣಪ್ಪ ಅವರು ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರಿನ ಪ್ರಕಾರ, ಶನಿವಾರ ಮುಂಜಾನೆ ಸುಮಾರು 5.45 ಗಂಟೆಗೆ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ವೇಳೆ ಕಂಚಿನಬಾಗಿಲು ಸಮೀಪದ ರಸ್ತೆಯ ಸಣ್ಣ ತಿರುವಿನಲ್ಲಿ ಚಾಲಕ ಬಸ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಬಸ್ ರಸ್ತೆ ಮೇಲೆ ಪಲ್ಟಿಯಾಗಿ ಉರುಳಿದೆ.
ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಇರಕಲಗಡ ನಿವಾಸಿ ಶರಣಯ್ಯ ತಿಪ್ಪಯ್ಯ ಕಲ್ಲಮಠ (42) ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ದೂರುದಾರ ಸೇರಿದಂತೆ ಬಸ್ನಲ್ಲಿದ್ದ 22ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಉತ್ತರ ಪ್ರದೇಶ ಮೂಲದ ಪ್ರಯಾಣಿಕರು ಸೇರಿದ್ದಾರೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಲ್ಲಿ ಚಾಲಕನಿಗೂ ಗಾಯಗಳಾಗಿದ್ದು, ಬಸ್ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.