Sunday, June 14, 2026
HomeNationalಅಣ್ಣಾಮಲೈ ಬಿಜೆಪಿಗೆ ಟಾಟಾ ಬಾಯ್‌ ಬಾಯ್?

ಅಣ್ಣಾಮಲೈ ಬಿಜೆಪಿಗೆ ಟಾಟಾ ಬಾಯ್‌ ಬಾಯ್?

ಹೊಸ ಪಕ್ಷದ ಊಹಾಪೋಹಗಳಿಗೆ ಎರಡು ದಿನಗಳಲ್ಲಿ ಉತ್ತರ

ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿರುವ ಬೆನ್ನಲ್ಲೇ ಅಣ್ಣಾಮಲೈ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಣ್ಣಾಮಲೈ ಬಿಜೆಪಿ ಚಟುವಟಿಕೆಗಳಿಂದ ಸ್ವಲ್ಪ ದೂರ ಉಳಿದಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಇದರ ನಡುವೆಯೇ ಅವರು ಬಿಜೆಪಿ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳು ಹಾಗೂ ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಆದರೆ ಈ ಕುರಿತು ಸ್ಪಷ್ಟನೆ ನೀಡಲು ನಿರಾಕರಿಸಿರುವ ಅಣ್ಣಾಮಲೈ, “ದಯವಿಟ್ಟು ಕಾಯಿರಿ. ಎರಡು ದಿನಗಳಲ್ಲಿ ಮಾತನಾಡುತ್ತೇನೆ” ಎಂದು ಹೇಳಿರುವುದು ರಾಜಕೀಯ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಅಣ್ಣಾಮಲೈ ಅವರು 2021ರಿಂದ 2025ರವರೆಗೆ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ರಾಜಕೀಯದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿತ್ತು. ಆದರೆ ಮೈತ್ರಿಕೂಟದ ಪಕ್ಷ ಎಐಎಡಿಎಂಕೆ ಜತೆಗಿನ ಭಿನ್ನಾಭಿಪ್ರಾಯಗಳು ಹಾಗೂ ಪಕ್ಷದ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಲಾಗಿತ್ತು.

ಈಗ ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಿರ್ಧಾರ ಏನಾಗಲಿದೆ ಎಂಬುದರತ್ತ ತಮಿಳುನಾಡು ಮಾತ್ರವಲ್ಲ, ರಾಷ್ಟ್ರೀಯ ರಾಜಕೀಯ ವಲಯವೂ ಕಣ್ಣಿಟ್ಟಿದೆ. ಅವರು ಬಿಜೆಪಿಯಲ್ಲೇ ಮುಂದುವರಿಯುತ್ತಾರೆಯೇ ಅಥವಾ ಹೊಸ ರಾಜಕೀಯ ವೇದಿಕೆ ನಿರ್ಮಿಸುತ್ತಾರೆಯೇ ಎಂಬ ಪ್ರಶ್ನೆಗೆ ಮುಂದಿನ ಕೆಲ ದಿನಗಳಲ್ಲಿ ಉತ್ತರ ಸಿಗುವ ಸಾಧ್ಯತೆ ಇದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share