ಯಲ್ಲಾಪುರ: ತಾಲೂಕಿನ ಮದನೂರು, ಖಂಡ್ರನಕೊಪ್ಪ ಹಾಗೂ ಮಾದೇವಕೊಪ್ಪ ಭಾಗಗಳಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂದು ಮದನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಠ್ಠು ಶೆಳಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ ಮತ್ತು ಕಾಲೇಜುಗಳಿಗೆ ತೆರಳಲು ಸರ್ಕಾರಿ ಬಸ್ಗಳನ್ನೇ ಅವಲಂಬಿಸಿದ್ದು, ಯಲ್ಲಾಪುರ ಹಾಗೂ ಕಿರವತ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸಿಗದಿರುವುದು ಶೈಕ್ಷಣಿಕ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿದ್ದಾರೆ.
ಈ ಭಾಗದಲ್ಲಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ಅವರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ದೊರೆತರೆ ಉತ್ತಮ ಸಾಧನೆ ಮಾಡಲು ಅವಕಾಶ ಸಿಗಲಿದೆ. ಆದರೆ ಸಮರ್ಪಕ ಬಸ್ ಸೇವೆಯ ಕೊರತೆಯಿಂದ ವಿದ್ಯಾರ್ಥಿಗಳು ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ನಡೆದ ಗ್ರಾಮಸಭೆಯಲ್ಲಿಯೂ ಈ ಸಮಸ್ಯೆ ಪ್ರಸ್ತಾಪವಾಗಿದ್ದು, ಶಾಸಕರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದಾಗ್ಯೂ, ಒಂದು ವರ್ಷ ಕಳೆದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಅನೇಕ ವಿದ್ಯಾರ್ಥಿಗಳು ಬಸ್ ಹತ್ತಲು ಸುಮಾರು 8 ಕಿಲೋಮೀಟರ್ಗಳಷ್ಟು ಕಾಡುಮಾರ್ಗದಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಅಲ್ಲದೆ, ಹುಬ್ಬಳ್ಳಿ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ಗಳು ಪ್ರಯಾಣಿಕರಿಂದ ತುಂಬಿರುವ ಕಾರಣ ಗ್ರಾಮೀಣ ಭಾಗಗಳಲ್ಲಿ ನಿಲುಗಡೆ ನೀಡದೆ ಸಾಗುತ್ತಿರುವ ಘಟನೆಗಳೂ ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೂಡಲೇ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸ್ಥಳೀಯರೊಂದಿಗೆ ಹೋರಾಟ ನಡೆಸಲಾಗುವುದು ಎಂದು ವಿಠ್ಠು ಶೆಳಕೆ ಎಚ್ಚರಿಕೆ ನೀಡಿದ್ದಾರೆ.