ಕಾರವಾರ: ಭಾರತೀಯ ಜನತಾ ಪಕ್ಷದ ಕಾರವಾರ ನಗರ ಮಂಡಲದ ಕಾರ್ಯಕಾರಿಣಿ ಸಭೆ ನಗರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಬೂತ್ ಮಟ್ಟದ ಚಟುವಟಿಕೆಗಳು ಹಾಗೂ ಮುಂಬರುವ ಚುನಾವಣಾ ಸಿದ್ಧತೆ ಕುರಿತು ಚರ್ಚೆ ನಡೆಯಿತು.
ಕಾರವಾರ ವಿಧಾನಸಭಾ ಕ್ಷೇತ್ರದ ನೂತನ ಬಿಜೆಪಿ ಬಿಎಲ್ಒ ರಾಘು ಭಟ್ ಅವರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಮಾಹಿತಿ ನೀಡಿ, ಬೂತ್ ತಂಡಗಳು ಬಿಎಲ್ಒಗಳೊಂದಿಗೆ ಸಮನ್ವಯ ಸಾಧಿಸಿ ಮತದಾರರ ಪಟ್ಟಿಯ ಮ್ಯಾಪಿಂಗ್ ಹಾಗೂ ಅಗತ್ಯ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳುವಂತೆ ತಿಳಿಸಿದರು.
ನಗರಾಧ್ಯಕ್ಷ ನಾಗೇಶ ಕುರುಡೇಕರ್ ಮಾತನಾಡಿ, ಪ್ರತಿ ತಿಂಗಳ ಮೊದಲ ವಾರದಲ್ಲಿ ನಿಯಮಿತವಾಗಿ ಕಾರ್ಯಕಾರಿಣಿ ಸಭೆ ನಡೆಸಲಾಗುವುದು. ಸಭೆಗಳಿಗೆ ಪದಾಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರಗಳ ತಂಡಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ನಗರ ಪ್ರಭಾರಿ ರಾಜು ಭಂಡಾರಿ ಮಾತನಾಡಿ, ಕಾರ್ಯಕಾರಿಣಿ ಸಭೆಗಳ ಹಾಜರಾತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಹಾಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಘಟನಾಯಕರು ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಚಟುವಟಿಕೆಗಳ ಮಾಹಿತಿ ಸಂಗ್ರಹಿಸಿ ಮೇಲ್ಮಟ್ಟಕ್ಕೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪ್ರಕೋಷ್ಠ ಸಂಚಾಲಕ ವಿ.ಎಂ. ಹೆಗಡೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಹಾಗೂ ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಕುರಿತು ಮಾಹಿತಿ ನೀಡಿದರು. ಪದವೀಧರ ಮತದಾರರ ನೋಂದಣಿಗೆ ಅಗತ್ಯವಿರುವ ನಮೂನೆ-18 ಸಲ್ಲಿಕೆ ಕುರಿತು ಕಾರ್ಯಕರ್ತರಿಗೆ ವಿವರಿಸಿದರು.
ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದೇವಿದಾಸ ಕಂತ್ರೇಕರ್ ವಂದಿಸಿದರು.
ಸಭೆಯಲ್ಲಿ ರಾಜ್ಯ ಪ್ರಕೋಷ್ಠ ಸದಸ್ಯ ಸುನೀಲ ಸೋನಿ, ಜಿಲ್ಲಾ ವಿಶೇಷ ಆಹ್ವಾನಿತೆ ನಯನಾ ನಿಲಾವರ್, ನಗರಸಭೆಯ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ್, ಬಿಜೆಪಿ ಮಂಡಲದ ಪದಾಧಿಕಾರಿಗಳು, ಮಾಜಿ ನಗರಸಭಾ ಸದಸ್ಯರು, ಮಹಾಶಕ್ತಿಕೇಂದ್ರ ಅಧ್ಯಕ್ಷರು, ಪ್ರಭಾರಿಗಳು, ಶಕ್ತಿಕೇಂದ್ರ ಪ್ರಮುಖರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.