ಮಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಇತ್ತೀಚೆಗೆ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವೇ ಕೊಚ್ಚಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಹೆದ್ದಾರಿ ಮೊದಲ ಮಳೆಯನ್ನೇ ತಡೆದುಕೊಳ್ಳದೆ ಕುಸಿದಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮೂಡುಬಿದಿರೆ ತಾಲೂಕಿನ ತೆಂಕ ಮಿಜಾರು ಪ್ರದೇಶದಲ್ಲಿ ನಿರ್ಮಿಸಲಾದ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಸಾರ್ವಜನಿಕ ಬಳಕೆಗೆ ಬಂದಿದ್ದ ಈ ಹೆದ್ದಾರಿ ಒಂದು ಮುಂಗಾರು ಋತುವನ್ನೂ ಸಮರ್ಪಕವಾಗಿ ಎದುರಿಸಲು ವಿಫಲವಾಗಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ಥಳೀಯರ ಪ್ರಕಾರ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಾದ ವೈಜ್ಞಾನಿಕ ವ್ಯವಸ್ಥೆ ಕಲ್ಪಿಸಿಲ್ಲ. ಹೆಚ್ಚಿನ ಪ್ರಮಾಣದ ನೀರಿನ ಹರಿವನ್ನು ಗಮನದಲ್ಲಿಟ್ಟುಕೊಂಡು ದೊಡ್ಡ ಮೋರಿ ನಿರ್ಮಿಸಬೇಕಿದ್ದ ಸ್ಥಳದಲ್ಲಿ ಸಣ್ಣ ಗಾತ್ರದ ಮೋರಿ ನಿರ್ಮಿಸಿರುವುದರಿಂದ ನೀರು ರಸ್ತೆಯ ಮೇಲೆಯೇ ಸಂಗ್ರಹಗೊಂಡಿದೆ. ಪರಿಣಾಮವಾಗಿ ರಸ್ತೆಯ ಅಡಿಭಾಗದ ಮಣ್ಣು ಹಾಗೂ ಜಲ್ಲಿಕಲ್ಲುಗಳು ಕೊಚ್ಚಿಹೋಗಿ, ರಸ್ತೆಯ ಒಂದು ಭಾಗ ಕುಸಿದಿದೆ.
ಕಾಮಗಾರಿ ನಿರ್ವಹಿಸಿದ ಡಿಬಿಎಲ್ ಕಂಪನಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಕಳಪೆ ಕಾಮಗಾರಿಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಮೊದಲ ಮಳೆಯಲ್ಲೇ ಹೆದ್ದಾರಿ ಹಾನಿಗೊಳಗಾಗಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಸಂದರ್ಭದಲ್ಲಿ ಇನ್ನಷ್ಟು ಅಪಾಯ ಸಂಭವಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿ ನಿರ್ಮಾಣದಲ್ಲಿ ಗುಣಮಟ್ಟದ ಮಾನದಂಡಗಳನ್ನು ಪಾಲಿಸಲಾಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.