ಯಲ್ಲಾಪುರ: ತಾಲೂಕಿನ ಹಾಸಣಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿ ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ ಮುಖಂಡರಾಗಿದ್ದ ಗೋಪಾಲಕೃಷ್ಣ ಭಟ್ ಹಾಗೂ ವಿನೋದ ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಪಕ್ಷದ ಶಾಲು ಹೊದಿಸಿ ಅವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಪಕ್ಷವು ಸದಾ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಸಿದ್ಧಾಂತಗಳನ್ನು ನಂಬಿ ಸೇರ್ಪಡೆಯಾಗಿರುವ ಕಾರ್ಯಕರ್ತರು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಿ.ಡಿ. ನಾಯ್ಕ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ಪ್ರಚಾರ ಸಮಿತಿ ಅಧ್ಯಕ್ಷ ನರಸಿಂಹ ನಾಯ್ಕ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ಧಿ, ಪ್ರಮುಖರಾದ ನವೀನ ಹೆಗಡೆ, ರಾಜು ನಾಯ್ಕ, ಚಂದ್ರಶೇಖರ ಮೊಗೇರ್, ಸದಾನಂದ ಮೊಗೇರ್, ಎಂ.ಕೆ. ಭಟ್, ಗಣೇಶ ರೊಕಡೆ ಸೇರಿದಂತೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು, ಕಾರ್ಯಕರ್ತರು, ಘಟಕಾಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.