ಕಾರವಾರ: ವಿದ್ಯಾರ್ಥಿ ಉಚಿತ ಹಾಗೂ ರಿಯಾಯಿತಿ ಬಸ್ ಪಾಸ್ ವಿತರಣೆಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾ) ಸ್ಥಗಿತಗೊಳಿಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ಸಂಸ್ಥೆ ಸ್ಪಷ್ಟನೆ ನೀಡಿದೆ.
ಸಂಸ್ಥೆಯ ಪ್ರಕಟಣೆಯ ಪ್ರಕಾರ, 2026-27ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ಗಳಿಗಾಗಿ ಮೇ 29ರಿಂದಲೇ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 1ರಿಂದ ಪಾಸ್ ಮುದ್ರಣ ಕಾರ್ಯವೂ ಆರಂಭವಾಗಿದೆ. ಹೀಗಾಗಿ ವಿದ್ಯಾರ್ಥಿ ಬಸ್ ಪಾಸ್ ಕೌಂಟರ್ಗಳ ಕಾರ್ಯನಿರ್ವಹಣೆಯನ್ನು ಎಲ್ಲಿಯೂ ಸ್ಥಗಿತಗೊಳಿಸಲಾಗಿಲ್ಲ ಎಂದು ತಿಳಿಸಲಾಗಿದೆ.
ಜೂನ್ 7ರವರೆಗೆ ವಾಕರಸಾ ವ್ಯಾಪ್ತಿಯಲ್ಲಿ ಒಟ್ಟು 4,108 ಅರ್ಜಿಗಳು ಸ್ವೀಕೃತಗೊಂಡಿದ್ದು, ಅವುಗಳಲ್ಲಿ 3,635 ಅರ್ಜಿಗಳನ್ನು ಈಗಾಗಲೇ ಅನುಮೋದಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ಹಾಗೂ ಅನುಮೋದನಾ ಪ್ರಕ್ರಿಯೆ ಮುಂದುವರಿದಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಸರ್ಕಾರದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ ಹಾಗೂ ರಿಯಾಯಿತಿ ಬಸ್ ಪಾಸ್ಗಳಿಗೆ ಸಂಬಂಧಿಸಿದ ಅಧಿಕೃತ ಮಾರ್ಗಸೂಚಿಗಳು ಪ್ರಕಟವಾದ ತಕ್ಷಣ ನಿಯಮಾನುಸಾರ ಉಚಿತ ಪಾಸ್ಗಳ ವಿತರಣಾ ಕಾರ್ಯ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.
ಈ ನಡುವೆ ಅಗತ್ಯವಿದ್ದ ವಿದ್ಯಾರ್ಥಿಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿ ರಿಯಾಯಿತಿ ಬಸ್ ಪಾಸ್ ಪಡೆದು ಸಾರ್ವಜನಿಕ ಸಾರಿಗೆ ಸೇವೆಯ ಸದುಪಯೋಗ ಪಡೆಯಬಹುದು. ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟವಾದ ಬಳಿಕ ನಿಯಮಾನುಸಾರ ಹಣ ಮರುಪಾವತಿ ಮಾಡುವ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ವಿದ್ಯಾರ್ಥಿಗಳು ವದಂತಿಗಳಿಗೆ ಕಿವಿಗೊಡದೆ, ತಮ್ಮ ಅಗತ್ಯಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆದುಕೊಳ್ಳುವಂತೆ ವಾಕರಸಾ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.