ದಾಂಡೇಲಿ: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಆಸಾಮಿಯೊಬ್ಬನನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ದಾಂಡೇಲಿಯ ಬರ್ಚಿ ರಸ್ತೆ, ಜನತಾ ವಿದ್ಯಾಲಯ ಸಮೀಪದ ನಿವಾಸಿ ಬಾಬು ರಾಮಪ್ಪ ದೊಡ್ಡಮನಿ (41) ಎಂಬಾತನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ 2012ರಿಂದ 2025ರವರೆಗೆ ಒಟ್ಟು 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಆತನ ವಿರುದ್ಧ ಎರಡು ಕೊಲೆ ಯತ್ನ, ಮೂರು ದೊಂಬಿ, ಒಂದು ಜೂಜಾಟ, ಒಂದು ಲೈಂಗಿಕ ದೌರ್ಜನ್ಯ, ಒಂದು ಹಲ್ಲೆ ಹಾಗೂ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಒಂದು ಪ್ರಕರಣ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. ಆದರೂ ಆತ ತನ್ನ ಚಟುವಟಿಕೆಗಳಲ್ಲಿ ಸುಧಾರಣೆ ತೋರದೆ ಕ್ರಿಮಿನಲ್ ಕೃತ್ಯಗಳನ್ನು ಮುಂದುವರಿಸಿದ್ದ.
ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಕಂಡುಬಂದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಗಡಿಪಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿ, ಅಭಿಯೋಜನೆ ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿದ ಬಳಿಕ, ಬಾಬು ದೊಡ್ಡಮನಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ಆದೇಶದಂತೆ ಆರೋಪಿಯನ್ನು ಬೀದರ ಜಿಲ್ಲೆಯ ಬೀದರ ಸಬ್ ಅರ್ಬನ್ (ಬೀದರ ನಗರ) ಪೊಲೀಸ್ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಲಾಗಿದೆ.