ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಸಾಂದ್ರತೆ ಹೆಚ್ಚಿಸುವ ಉದ್ದೇಶದಿಂದ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜೂನ್ 21ರಿಂದ ಜುಲೈ 11ರವರೆಗೆ ನಿರಂತರ 21 ದಿನಗಳ ಕಾಲ ಜಿಲ್ಲಾದ್ಯಂತ ದಶಲಕ್ಷ ಗಿಡ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರಣ್ಯವಾಸಿಗಳು ಸಂಪೂರ್ಣ ಸಜ್ಜಾಗಿದ್ದಾರೆ ಎಂದು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಕಳೆದ ಒಂದು ದಶಕದಿಂದ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅರಣ್ಯವಾಸಿಗಳು ನಡೆಸಿಕೊಂಡು ಬರುತ್ತಿರುವ ವೃಕ್ಷಾರೋಪಣ ಕಾರ್ಯಕ್ರಮವನ್ನು ಈ ವರ್ಷವೂ ಯಶಸ್ವಿಗೊಳಿಸಲು ತಾಲೂಕು ಮಟ್ಟದಲ್ಲಿ ಗ್ರೀನ್ ಕಾರ್ಡ್ ಪ್ರಮುಖರ ಸಭೆಗಳನ್ನು ಸಂಘಟಿಸಲಾಗಿದ್ದು, ವಿವಿಧ ಸ್ಥಳಗಳಿಂದ ಲಕ್ಷಾಂತರ ಗಿಡಗಳನ್ನು ಸಂಗ್ರಹಿಸುವ ಕಾರ್ಯ ಭರದಿಂದ ನಡೆಯುತ್ತಿದೆ.
ಅಭಿಯಾನದ ಯೋಜನೆಯಂತೆ ಜಿಲ್ಲೆಯ ನೂರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವ್ಯಾಪ್ತಿಯ 500ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ‘ವೃಕ್ಷಾರೋಪಣ ಹಬ್ಬ’ವಾಗಿ ಆಚರಿಸಲು ಸಿದ್ಧತೆಗಳು ನಡೆದಿವೆ. ಅಭಿಯಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪದ್ಮಶ್ರೀ ಪುರಸ್ಕೃತೆ, ದಿವಂಗತ ‘ವೃಕ್ಷಮಾತೆ’ ತುಳಸಿ ಗೌಡ ಅವರ ಭಾವಚಿತ್ರ ಒಳಗೊಂಡ ವಿಶೇಷ ಲಾಂಛನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಅರಣ್ಯವಾಸಿಗಳಲ್ಲಿ ಅರಣ್ಯ ಸಂರಕ್ಷಣೆ ಹಾಗೂ ಅರಣ್ಯ ಸಾಂದ್ರತೆ ಹೆಚ್ಚಿಸುವ ಮನೋಭಾವ ಬೆಳೆಸುವ ಉದ್ದೇಶದಿಂದಲೇ ಈ ಗಿಡ ನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರವೀಂದ್ರ ನಾಯ್ಕ ವಿವರಿಸಿದ್ದಾರೆ.
ಅಭಿಯಾನದ ಅಂಗವಾಗಿ ದೀರ್ಘಕಾಲ ಬಾಳಿಕೆ ಬರುವ ಮರಗಳ ಜೊತೆಗೆ ವಿವಿಧ ಹಣ್ಣು-ಹಂಪಲು ಗಿಡಗಳನ್ನೂ ನೆಡುವಂತೆ ಅರಣ್ಯವಾಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.