ಮೈಸೂರು : ಪಿರಿಯಾಪಟ್ಟಣದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಜೂನ್ 24ರಂದು ಪಿರಿಯಾಪಟ್ಟಣದ ಬಿಜೆಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಿ. ರಾಜೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಈ ಮೇಳ ನಡೆಯಲಿದ್ದು, ಗ್ರಾಮೀಣ ಭಾಗದ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಘಟಕದ ಸದಸ್ಯ ಹಾಗೂ ಮಾಜಿ ತಾಲೂಕು ಅಧ್ಯಕ್ಷ ಪಿ.ಜಿ. ರವಿ ಮಾತನಾಡಿ, ಮೇಳದಲ್ಲಿ ಭಾಗವಹಿಸುವವರಿಗೆ ಉಚಿತ ಪ್ರವೇಶವಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವಿಶೇಷ ಚೇತನರಿಗೂ ಉದ್ಯೋಗಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆರ್.ಟಿ. ಸತೀಶ್, ಲೋಕಪಾಲಯ್ಯ, ನಳಿನಿ, ರವಿ, ಚನ್ನಬಸವ, ದೇವೇಂದ್ರ ಹಾಗೂ ವಿಶ್ವನಾಥ್ ಉಪಸ್ಥಿತರಿದ್ದರು.