ಕಾರವಾರ: ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಅಕ್ರಮ ತಡೆಗೋಡೆಯನ್ನು ಪಂಚಾಯತ್ ಆಡಳಿತ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ತೆರವುಗೊಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಿಂದ ಐಸ್ ಫ್ಯಾಕ್ಟರಿ ಸಂಪರ್ಕಿಸುವ ರಸ್ತೆ ಅನಾದಿಕಾಲದಿಂದ ಸಾರ್ವಜನಿಕ ಬಳಕೆಯಲ್ಲಿದ್ದು, ಕಾಲಕ್ರಮೇಣ ಅಭಿವೃದ್ಧಿಗೊಂಡು ಕಾಂಕ್ರೀಟ್ ರಸ್ತೆಯಾಗಿ ಮಾರ್ಪಟ್ಟಿದೆ. ಆದರೆ ಇತ್ತೀಚೆಗೆ ಚೆಂಡಿಯಾ ಗ್ರಾಮದ ನಿವಾಸಿಯೊಬ್ಬರು ರಸ್ತೆಗೆ ಅಡ್ಡವಾಗಿ ತಡೆಗೋಡೆ ನಿರ್ಮಿಸಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿತ್ತು.
ಈ ಬಗ್ಗೆ ಗ್ರಾಮಸ್ಥರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಭೂದಾಖಲೆಗಳ ಸಹಾಯಕ ನಿರ್ದೇಶಕರ ವರದಿ, ಉಪ ತಹಶೀಲ್ದಾರ್ ಪರಿಶೀಲನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಕಾನೂನು ಸಲಹೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಚೆಂಡಿಯಾ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪ್ರಶಾಂತ್ ಎಚ್.ಎಸ್. ನೇತೃತ್ವದಲ್ಲಿ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಸಿ ತಡೆಗೋಡೆಯನ್ನು ತೆರವುಗೊಳಿಸಲಾಯಿತು. ಇದರೊಂದಿಗೆ ರಸ್ತೆ ಮತ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಂಡಿದೆ.
ಗ್ರಾಮಸ್ಥರ ದೂರಿಗೆ ಸ್ಪಂದಿಸಿ ಆಡಳಿತ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.