ಕಾರವಾರ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 27ರ ಬೆಳಿಗ್ಗೆ 8.30 ಗಂಟೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಮುಂಗಾರು ಪೂರ್ವ ಸಿದ್ಧತೆಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತದ ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಮಾಧ್ಯಮಗಳ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ. ವಿಶೇಷವಾಗಿ ಮಕ್ಕಳ ಮೇಲೆ ಪಾಲಕರು ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ಜಲಾಶಯ ಮತ್ತು ಸಮುದ್ರದ ನೀರಿಗೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಕೃಷಿಕರು ಗುಡುಗು, ಸಿಡಿಲು ಹಾಗೂ ಭಾರೀ ಮಳೆಯ ಸಂದರ್ಭಗಳಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸೂಚಿಸಲಾಗಿದೆ.
ತಗ್ಗು ಪ್ರದೇಶಗಳಲ್ಲಿ ಅಥವಾ ಅಪಾಯದ ಸ್ಥಳಗಳಲ್ಲಿ ವಾಸಿಸುವವರು ಅಗತ್ಯವಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಈಗಾಗಲೇ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕಾಲುಸಂಕ, ಕಿರು ಸೇತುವೆ ಹಾಗೂ ನೀರು ಹರಿಯುವ ಮಾರ್ಗಗಳನ್ನು ದಾಟುವಾಗ ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಯಾವುದೇ ಶಿಥಿಲಾವಸ್ಥೆಯ ಕಟ್ಟಡ, ಅಪಾಯಕಾರಿಯಾದ ಗೋಡೆ ಅಥವಾ ಭೂಕುಸಿತದ ಸಾಧ್ಯತೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿ 08382-229857, ವಾಟ್ಸಪ್ ಸಂಖ್ಯೆ 9483511015 ಅಥವಾ ಸಂಬಂಧಿಸಿದ ತಾಲೂಕು ತಹಶೀಲ್ದಾರ್ ಕಚೇರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.