ಯಲ್ಲಾಪುರ: ಜಿಲ್ಲಾದ್ಯಂತ ನಡೆಯುತ್ತಿರುವ ‘ದಶ ಲಕ್ಷ ಗಿಡ ನೆಡುವ ಅಭಿಯಾನ’ದ ಅಂಗವಾಗಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಜೂನ್ 26ರಂದು ಯಲ್ಲಾಪುರ ತಾಲೂಕಿಗೆ ಭೇಟಿ ನೀಡಲಿದ್ದಾರೆ ಎಂದು ತಾಲೂಕು ಸಂಚಾಲಕ ಚಂದ್ರು ಪೂಜಾರಿ ತಿಳಿಸಿದ್ದಾರೆ.
ಜೂನ್ 21ರಿಂದ ಆರಂಭವಾಗಿರುವ ಅಭಿಯಾನದ ಭಾಗವಾಗಿ ಹಾಸಣಗಿ ಹಾಗೂ ಕಂಪ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯವಾಸಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 26ರಂದು ಮಧ್ಯಾಹ್ನ 2.30ಕ್ಕೆ ಶಿರನಾಲಾ ಗ್ರಾಮದ ಗಣಪತಿ ದೇವಸ್ಥಾನ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವತಿಯಿಂದ ಉಚಿತವಾಗಿ ಸಿದ್ಧಪಡಿಸಲಾದ ಅಸಮರ್ಪಕ ಜಿಪಿಎಸ್ ಮೇಲ್ಮನವಿ ಪ್ರತಿಗಳನ್ನು ವಿತರಿಸಲಾಗುವುದು. ಬಳಿಕ ಹಿತ್ಲಳ್ಳಿ ಹಾಗೂ ಕುಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರೀನ್ ಕಾರ್ಡ್ ಪ್ರಮುಖರ ನೇತೃತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮಗಳು ನಡೆಯಲಿವೆ.
ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಸಾಂದ್ರತೆ ಹೆಚ್ಚಿಸುವ ಉದ್ದೇಶದ ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಸಕ್ತರಿಗೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.