ಯಲ್ಲಾಪುರ: ತಾಲೂಕಿನ ಕೆಲವು ಕನ್ನಡ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅಗತ್ಯ ಆಹಾರ ಧಾನ್ಯಗಳ ಕೊರತೆ ಎದುರಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಯಲ್ಲಾಪುರ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಶಾಲಾ ಮಕ್ಕಳ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿಯೇ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಶಾಲಾ ಮಕ್ಕಳ ಬಿಸಿಯೂಟಕ್ಕೆ ಅಕ್ಕಿಯ ಕೊರತೆ ಎದುರಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಆಹಾರ ಧಾನ್ಯಗಳ ಕೊರತೆಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ಅಕ್ಕಿ ಸರಬರಾಜಿನಲ್ಲಿ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಅವುಗಳನ್ನು ಕೂಡಲೇ ಸರಿಪಡಿಸಿ, ಒಂದು ವಾರದೊಳಗೆ ಪರಿಸ್ಥಿತಿಯನ್ನು ಸುಧಾರಿಸಬೇಕು. ಇಲ್ಲವಾದಲ್ಲಿ ಬಿಜೆಪಿ ನಿಯೋಗ ಶಾಲೆಗಳಿಗೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಸ್ಯೆ ಮುಂದುವರಿದರೆ ಮಕ್ಕಳ ಹಿತದೃಷ್ಟಿಯಿಂದ ಮನೆ ಮನೆಗಳಿಂದ ಅಕ್ಕಿ ಸಂಗ್ರಹಿಸಿ ಶಾಲೆಗಳಿಗೆ ಪೂರೈಸುವ ಕಾರ್ಯವನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೊಟ್ಟೆ ವಿತರಣೆಯ ವಿಷಯದಲ್ಲೂ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಾರುಕಟ್ಟೆಯಲ್ಲಿ ₹6ರಿಂದ ₹7 ದರಕ್ಕೆ ಮೊಟ್ಟೆ ಖರೀದಿಸಬೇಕಾಗಿರುವ ಶಿಕ್ಷಕರಿಗೆ ಸರ್ಕಾರ ಕೇವಲ ₹4 ಮಾತ್ರ ಪಾವತಿಸುತ್ತಿದೆ. ಇದರಿಂದ ಶಿಕ್ಷಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಆರೋಪಿಸಿದ್ದಾರೆ.
ಶಾಲಾ ಮಕ್ಕಳ ಬಿಸಿಯೂಟ ಹಾಗೂ ಮೊಟ್ಟೆ ಪೂರೈಕೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಸರ್ಕಾರ ತಕ್ಷಣ ಬಗೆಹರಿಸಿ, ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಯಲ್ಲಾಪುರ ಮಂಡಳದ ಪರವಾಗಿ ಅವರು ಒತ್ತಾಯಿಸಿದ್ದಾರೆ.