ಭಟ್ಕಳ: ಭಟ್ಕಳದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿರುವ ಶಹರ ಪೊಲೀಸರು, ಕಳುವಾಗಿದ್ದ 4.50 ಲಕ್ಷ ರೂ. ಮೌಲ್ಯದ 29.01 ಗ್ರಾಂ ಬಂಗಾರದ ಆಭರಣಗಳು ಹಾಗೂ 20 ಸಾವಿರ ರೂ. ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ 8, 2026ರಂದು ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಭಟ್ಕಳದ ಕಿದ್ವಾಯಿ ರಸ್ತೆಯಲ್ಲಿರುವ ದೂರುದಾರರ ಮನೆಯ ಹಿಂದಿನ ಕಿಟಕಿಯ ಗಾಜು ಒಡೆದು ಒಳನುಗ್ಗಿದ್ದ ಕಳ್ಳರು, ಬಾಗಿಲಿನ ಚಿಲಕ ತೆರೆದು ಮನೆ ಪ್ರವೇಶಿಸಿದ್ದರು. ಬಳಿಕ ಮನೆಯಲ್ಲಿದ್ದ ಸುಮಾರು 55 ಗ್ರಾಂ ತೂಕದ 5.50 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ 10 ಸಾವಿರ ರೂ. ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ಈಗಾಗಲೇ ಬಂಧನಕ್ಕೊಳಗಾಗಿದ್ದ ಫೌಜಾನ್ ಅಹ್ಮದ್ (ಮಸ್ತಾಕ್ ಅಹ್ಮದ್ ಪುತ್ರ), ಬದ್ರಿಯಾ ಕಾಲೋನಿ, ಭಟ್ಕಳ ಈತನನ್ನು ವಿಚಾರಣೆ ನಡೆಸಿದಾಗ ಮಹತ್ವದ ಸುಳಿವು ದೊರಕಿತು. ಕಳವು ಮಾಡಿದ ಬಂಗಾರವನ್ನು ಬೆಂಗಳೂರಿನ ಕೆ.ಆರ್. ರಸ್ತೆಯಲ್ಲಿರುವ ಮಣಪ್ಪುರಂ ಫೈನಾನ್ಸ್ ಶಾಖೆಯಲ್ಲಿ ಅಡಮಾನ ಇಟ್ಟಿರುವುದಾಗಿ ಆತ ಒಪ್ಪಿಕೊಂಡಿದ್ದ.
ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಫೈನಾನ್ಸ್ ಸಂಸ್ಥೆಯಿಂದ 4.50 ಲಕ್ಷ ರೂ. ಮೌಲ್ಯದ 29.01 ಗ್ರಾಂ ಬಂಗಾರದ ಆಭರಣಗಳನ್ನು ಹಾಗೂ 20 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಕಳುವಾದ ಆಭರಣಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ಕೃಷ್ಣಮೂರ್ತಿ, ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ ಬಿ ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ ನೇತೃತ್ವದಲ್ಲಿ ಪಿಎಸ್ಐ ನವೀನ್ ಎಸ್. ನಾಯ್ಕ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಕರಣದ ಸ್ವತ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.