ಶಿರಸಿ: ಸ್ವರ್ಣವಲ್ಲೀ ಮಹಾಸಂಸ್ಥಾನದ ಸಮೀಪದ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.
ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
2025-26ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಈ ರಸ್ತೆ ನಿರ್ಮಾಣಕ್ಕೆ ₹5 ಲಕ್ಷ ಅನುದಾನ ಮಂಜೂರಾಗಿದ್ದು, ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ಅನುಷ್ಠಾನಗೊಳ್ಳಲಿದೆ.
ಈ ರಸ್ತೆ ನಿರ್ಮಾಣದಿಂದ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ತೆರಳುವ ಭಕ್ತರು ಹಾಗೂ ಸ್ಥಳೀಯರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದ್ದು, ಧಾರ್ಮಿಕ ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ನಳ್ಳಿ, ತಾ.ಪಂ ಮಾಜಿ ಸದಸ್ಯ ನಾಗರಾಜ ಶೆಟ್ಟಿ, ಆರ್.ಎನ್. ಹೆಗಡೆ ಉಳ್ಳಿಕೊಪ್ಪ, ಸ್ಥಳೀಯ ಜಾಗೃತ ವೇದಿಕೆಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.