ಕಾರವಾರ: ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳು ಯಾವುದೇ ವಿಳಂಬವಿಲ್ಲದೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದಂದೇ ವೇತನ ಪಾವತಿಯಾಗಬೇಕು. ಇಎಸ್ಐ ಮತ್ತು ಇಪಿಎಫ್ ಕಡಿತವನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು.
ಕರ್ತವ್ಯದ ವೇಳೆ ಸುರಕ್ಷತಾ ಪರಿಕರಗಳ ಬಳಕೆ ಕಡ್ಡಾಯಗೊಳಿಸುವುದರ ಜೊತೆಗೆ, ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್ಅಪ್ಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಸೂಚಿಸಿದರು.
ಗೃಹಭಾಗ್ಯ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಸಿದ್ಧಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರವೇ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲೂ ಮ್ಯಾನ್ಹೋಲ್ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸಬಾರದು. ಬದಲಿಗೆ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳನ್ನೇ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದ ಅವರು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.