ಇಬ್ಬರು ಪೊಲೀಸರ ಬಲೆಗೆ, ಮತ್ತೋರ್ವ ಪರಾರಿ
ಕಾರವಾರ: ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜುಗಾರಾಟ ನಡೆಸುತ್ತಿದ್ದ ಇಬ್ಬರನ್ನು ಕಾರವಾರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ಸಾರ್ವಜನಿಕ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಗುಂಪು ಸೇರಿ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಪ್ರಮೀಲಾ ವೈ. ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಈ ವೇಳೆ ಹಬ್ಬುವಾಡ ನಿವಾಸಿಗಳಾದ ಶರಣಪ್ಪ ಪರಸಪ್ಪ ಕಬ್ಬುರಗಿ (40) ಹಾಗೂ ದ್ಯಾಮಣ್ಣ ಬಸಪ್ಪ ಗೊಣ್ಣರ (37), ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾರೆ. ದಾಳಿಯ ವೇಳೆ ಮತ್ತೋರ್ವ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.
ಆರೋಪಿಗಳಿಂದ ಜೂಜಾಟಕ್ಕೆ ಬಳಸುತ್ತಿದ್ದ ಇಸ್ಪೀಟ್ ಎಲೆಗಳು ಹಾಗೂ ₹920 ನಗದು ವಶಪಡಿಸಿಕೊಳ್ಳಲಾಗಿದೆ.