ಬನವಾಸಿಯಲ್ಲಿ ಡಿಜಿ ಪೇ ಸೇವೆಗೆ ಚಾಲನೆ
ಬನವಾಸಿ: ಗ್ರಾಮೀಣ ಜನತೆಗೆ ಬ್ಯಾಂಕಿಂಗ್ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ಡಿಜಿ ಪೇ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಬ್ಯಾಂಕಿಗೆ ತೆರಳಬೇಕಾದ ಅನಿವಾರ್ಯತೆಯನ್ನು ಕಡಿಮೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಒಕ್ಕೂಟದ ಅಧ್ಯಕ್ಷೆ ಗಂಗಾ ಸಹವಾಸಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬನವಾಸಿ ವಲಯದ ಕಾರ್ಯಕ್ಷೇತ್ರಗಳಲ್ಲಿ ಮಂಗಳವಾರ ಡಿಜಿ ಪೇ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬನವಾಸಿ ವಲಯದ ಮೇಲ್ವಿಚಾರಕಿ ಸುನಂದಾ ನಾಯ್ಕ್ ಮಾತನಾಡಿ, ಗ್ರಾಮೀಣ ಹಾಗೂ ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗಿರುವ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪರಮಪೂಜ್ಯ ಖಾವಂದರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿ ಹಳ್ಳಿ-ಹಳ್ಳಿಗಳಲ್ಲಿ ಡಿಜಿ ಪೇ ಸೇವೆ ಆರಂಭಿಸಲಾಗುತ್ತಿದೆ. ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಎಲ್ಇ ರೇವತಿ, ಸುವಿಧಾ ಸಹಾಯಕಿ ಶೃತಿ, ಸೇವಾ ಪ್ರತಿನಿಧಿ ಅನಿತಾ ಬಂಗ್ಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು.