ಕಾರವಾರ: ರಾಜ್ಯದಲ್ಲಿ ಮಳೆ ಅಭಾವದಿಂದ ರೈತರು ಮತ್ತು ಜನರು ನೀರಿನ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಉತ್ತರ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಕಾರವಾರದ ಸುಭಾಷ್ ವೃತ್ತದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು.
ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ರಸ್ತೆ ಮಧ್ಯದಲ್ಲೇ ಧರಣಿ ನಡೆಸಿದ ಪ್ರತಿಭಟನಾಕಾರರು, ರಾಜ್ಯ ಹಾಗೂ ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿರುವಾಗ ನೆರೆ ರಾಜ್ಯಕ್ಕೆ ನೀರು ಹರಿಸುವುದು ನ್ಯಾಯಸಮ್ಮತವಲ್ಲ. ರಾಜ್ಯ ಸರ್ಕಾರ ತಕ್ಷಣವೇ ಕಾವೇರಿ ನೀರು ಬಿಡುಗಡೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅರುಣ ಹರ್ಕಡೆ, ಕಾವೇರಿ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬರು ಮಾಡಿದ್ದ ವೈರಲ್ ಹೇಳಿಕೆಗೆ ತಿರುಗೇಟು ನೀಡಿ, ಕಪ್ ಎಂದಿಗೂ ನಮ್ಮದೇ. ಕರ್ನಾಟಕವೇ ವೀರರ ಹಾಗೂ ಸಂಸ್ಕೃತಿಯ ನೆಲ. ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಶ್ರೀಕಾಂತ್ ಪಟಗಾರ್, ವಿವಿಧ ತಾಲೂಕುಗಳ ಅಧ್ಯಕ್ಷರಾದ ಬಸವರಾಜ ಬಂಡಿಗೇರಿಮಠ, ಅಶೋಕ್ ಮನೆ, ವಿಠ್ಠಲ್ ಪಟಗಾರ್, ನೀಲಾ ಮಾದರ್, ಗೀತಾ ಗವಸ್, ಅನಸೂಯಾ ಸುಳ್ಳದ, ಸುಮಿತ್ರಾ ಮಡಿವಾಳ, ಪೂರ್ಣಿಮಾ ಗೌಡಗಾವ್, ಗಣೇಶ್, ಮೋಹನ್, ಮಹೇಶ್ ಸೇರಿದಂತೆ ವಿವಿಧ ತಾಲೂಕುಗಳ ನೂರಾರು ಪದಾಧಿಕಾರಿಗಳು ಹಾಗೂ ಮಹಿಳಾ ಮುಖಂಡರು ಭಾಗವಹಿಸಿದ್ದರು.