ಅಧಿಕಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಖಡಕ್ ಸೂಚನೆ
ಅಂಕೋಲಾ: ತಾಲೂಕಿನ ಹಾರವಾಡದಲ್ಲಿ ವರ್ಷದಿಂದ ವರ್ಷಕ್ಕೆ ಉಲ್ಬಣಿಸುತ್ತಿರುವ ಕಡಲಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಅತ್ಯಗತ್ಯ ಎಂದು ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಹಾರವಾಡ ಕಡಲಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು, ಸಮುದ್ರದ ಅಬ್ಬರದಿಂದ ಸಂಕಷ್ಟಕ್ಕೊಳಗಾಗಿರುವ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಅಧಿಕಾರಿಗಳಿಂದ ವಾಸ್ತವ ಸ್ಥಿತಿಗತಿಯ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಅವರು, ಕಡಲಕೊರೆತ ತಡೆಗಟ್ಟಲು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಮನೆಗಳು ಹಾಗೂ ಕೃಷಿ ಭೂಮಿ ಸಮುದ್ರ ಪಾಲಾಗುವ ಅಪಾಯವಿದ್ದು, ಕರಾವಳಿ ನಿವಾಸಿಗಳ ಜೀವ ಮತ್ತು ಆಸ್ತಿಯ ರಕ್ಷಣೆಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಸ್ಥಳೀಯರು ಸಚಿವರ ಮುಂದೆ ತಮ್ಮ ಅಳಲು ತೋಡಿಕೊಂಡು, ಈ ವರ್ಷ ಮಳೆ ಹಾಗೂ ಗಾಳಿಯ ತೀವ್ರತೆ ಕಳೆದ ವರ್ಷಗಳಿಗಿಂತ ಕಡಿಮೆಯಿದ್ದರೂ ಕಡಲಕೊರೆತ ಹೆಚ್ಚಾಗಿದೆ ಎಂದು ತಿಳಿಸಿದರು.
ಸಮುದ್ರ ತೀರದ ಹಲವು ಮನೆಗಳು ಅಪಾಯದ ಅಂಚಿನಲ್ಲಿದ್ದು, ಪ್ರತಿ ಮಳೆಗಾಲದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದೆ. ಈ ಹಿಂದೆ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಶಾಶ್ವತ ಪರಿಹಾರ ಇನ್ನೂ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವರು ಸ್ಥಳದಲ್ಲೇ ಅಧಿಕಾರಿಗಳಿಗೆ ಅಗತ್ಯ ವರದಿ ಸಿದ್ಧಪಡಿಸಿ, ಶಾಶ್ವತ ಕಾಮಗಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಪರಿಶೀಲನೆ ವೇಳೆ ಕಾರವಾರ ಶಾಸಕ ಸತೀಶ ಕೆ. ಸೈಲ್, ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.