ಕಾರವಾರ: ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು 12 ದಿನಗಳ ಉಚಿತ ತರಬೇತಿ ನೀಡಲು ರುಡ್ಸೆಟ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ.
ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ಈ ತರಬೇತಿ ಆಗಸ್ಟ್ 31ರಿಂದ 12 ದಿನಗಳ ಕಾಲ ನಡೆಯಲಿದೆ. ತರಬೇತಿ ಸಂಪೂರ್ಣ ವಸತಿಯುತವಾಗಿದ್ದು, ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
18ರಿಂದ 50 ವರ್ಷದೊಳಗಿನ, ಕನ್ನಡ ಓದಲು ಮತ್ತು ಬರೆಯಲು ಬಲ್ಲ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ–ಯುವತಿಯರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊಂದಿರಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುತ್ತದೆ. ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಸ್ವಯಂ ಉದ್ಯೋಗವಾಗಿ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ತರಬೇತಿ ಉಪಯುಕ್ತವಾಗಲಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ. 9380162042, 9241482541, 9481506564 ಸಂಪರ್ಕಿಸಬಹುದು.
ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನೂ ಮೊ. 9108503452 ಅಥವಾ ದೂ. 08382-226386 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.