Monday, September 7, 2026
Join WhatsApp Group
HomeLocal Newsಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಹೊಸ ಭರವಸೆ

ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಹೊಸ ಭರವಸೆ

125 ಮಾನವ ದಿನಗಳ ಉದ್ಯೋಗ; ಜಾಬ್‌ ಕಾರ್ಡ್‌ ಮೇಳದಲ್ಲಿ ಇಒ ದಾಸನಕೊಪ್ಪ ಮಾಹಿತಿ

ಮುಂಡಗೋಡ: ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ರೈತರಿಗೆ ಅತ್ತ ಜಮೀನಿನಲ್ಲಿ ಕೃಷಿ ಕೆಲಸವೂ ಇಲ್ಲ, ಇತ್ತ ಸ್ವಂತ ಉದ್ಯೋಗವೂ ಇಲ್ಲ. ಇಂತಹ ಅಸಹಾಯಕ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಯೋಜನೆ ಹೊಸ ಭರವಸೆಯಾಗಿದೆ ಎಂದು ಮುಂಡಗೋಡ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದರು.

 ಚವಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಯನಕೊಪ್ಪ ಲಂಬಾಣಿ ತಾಂಡಾದಲ್ಲಿ ಆಯೋಜಿಸಿದ್ದ ಜಾಬ್‌ ಕಾರ್ಡ್‌ ಮೇಳದಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನರು ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜುಲೈ 1ರಿಂದ ಜಾರಿಗೆ ಬಂದಿರುವ ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ವರ್ಷಕ್ಕೆ 125 ಮಾನವ ದಿನಗಳ ಉದ್ಯೋಗ ಪಡೆಯುವ ಅವಕಾಶವಿದೆ. ಗಂಡು ಮತ್ತು ಹೆಣ್ಣು ಕಾರ್ಮಿಕರಿಗೆ ಸಮಾನವಾಗಿ ದಿನಕ್ಕೆ ₹382 ಕೂಲಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವ ದೀರ್ಘಕಾಲಿಕ ಸಮುದಾಯ ಕಾಮಗಾರಿಗಳು ಹಾಗೂ ಜನರ ಆರ್ಥಿಕ ಭದ್ರತೆಗೆ ನೆರವಾಗುವ ವೈಯಕ್ತಿಕ ಸೌಲಭ್ಯಗಳು ಸೇರಿದಂತೆ ಒಟ್ಟು 318 ಬಗೆಯ ಅನುಮೋದಿತ ಕಾಮಗಾರಿಗಳು ಯೋಜನೆಯಲ್ಲಿವೆ. ಹೀಗಾಗಿ ಉದ್ಯೋಗಕ್ಕಾಗಿ ಗ್ರಾಮ ತೊರೆದು ಪಟ್ಟಣಗಳಿಗೆ ವಲಸೆ ಹೋಗುವ ಬದಲು ಸ್ವಂತ ಊರಿನಲ್ಲಿಯೇ ಕೆಲಸ ಪಡೆದು ಜೀವನ ಸಾಗಿಸಲು ಯೋಜನೆ ಸಹಕಾರಿಯಾಗಲಿದೆ ಎಂದರು.

ಯೋಜನೆಯ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡುವುದರ ಜೊತೆಗೆ ಸ್ಥಳದಲ್ಲಿಯೇ ಹೊಸದಾಗಿ ಉದ್ಯೋಗ ಚೀಟಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಯಿತು. ಅರ್ಹ ಕುಟುಂಬಗಳಿಗೆ ಗ್ರಾಮೀಣ ರೋಜಗಾರ್‌ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಯಿತು.

ಈ ವೇಳೆ ಇ-ಕೆವೈಸಿ ಬಾಕಿ ಉಳಿಸಿಕೊಂಡಿದ್ದ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಉದ್ಯೋಗ ಚೀಟಿಗೆ ಹೊಸ ಸದಸ್ಯರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ಕ್ರಮಗಳನ್ನೂ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗಣಪತಿ ಪಿಲ್ಲೋಜಿ, ಗ್ರಾಪಂ ಮಾಜಿ ಸದಸ್ಯ ಪ್ರದೀಪ್‌ ಚವ್ಹಾಣ, ತಾಂತ್ರಿಕ ಸಂಯೋಜಕ ಅಲೋಕ್‌ ನಾಯ್ಕ, ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಸಾಮಾಜಿಕ ಲೆಕ್ಕ ಪರಿಶೋಧನೆ ಸಂಯೋಜಕ ಮಾರುತಿ, ಡಿಇಒ ಮಂಜುನಾಥ್‌ ಮಾಯಣ್ಣನವರ, ಬಿಎಫ್‌ಟಿ ಯುವರಾಜ್‌, ಮಂಜುನಾಥ್‌ ಸೇರಿದಂತೆ ಅಧಿಕಾರಿಗಳು, ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share