ಕುಮಟಾ: ಆರೋಗ್ಯ ಸಮಸ್ಯೆಯ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದ 35 ವರ್ಷದ ವ್ಯಕ್ತಿಯೊಬ್ಬರು ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಮಟಾ ತಾಲೂಕಿನ ಗೌಡಕುಳಿಯಲ್ಲಿ ನಡೆದಿದೆ.
ಮೃತರನ್ನು ಎತ್ತಿನಬೈಲ್ ಗೌಡಕುಳಿ ನಿವಾಸಿ ವಸಂತ ವಿಘ್ಣೇಶ್ವರ ಹೆಗಡೆ (35) ಎಂದು ಗುರುತಿಸಲಾಗಿದೆ. ಕೃಷಿ ಹಾಗೂ ಅಡುಗೆ ಕೆಲಸ ಮಾಡಿಕೊಂಡಿದ್ದ ಅವರು ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಬಲಭಾಗದಲ್ಲಿ ಗಡ್ಡೆಯಂತಹ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕೆಂದು ತಿಳಿಸಿದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದಾಗಿ ಆತಂಕದಲ್ಲಿದ್ದ ವಸಂತ ಅವರು ಆ.27ರಂದು ಸಂಜೆ 4ರಿಂದ 5 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ದೇವರ ಕೋಣೆಯ ಫ್ಯಾನ್ಗೆ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಕುಟುಂಬದವರು ಗಮನಿಸಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ಮೃತರ ತಂದೆ ವಿಘ್ನೇಶ್ವರ ಹೆಗಡೆ ಅವರು ನೀಡಿದ ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.