ಯಲ್ಲಾಪುರ: ತಾಲೂಕಿನ ಅರಬೈಲ್ ಘಾಟ್ನಲ್ಲಿ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ಸಂತೋಷ್ ವಿರೂಪಾಕ್ಷಪ್ಪ ಶಾಗೋಟಿ ಅವರು ನೀಡಿದ ದೂರಿನ ಪ್ರಕಾರ, ರಾಜಸ್ಥಾನ ಮೂಲದ ಮಹೇಂದ್ರ ಸಿಂಗ್ ಭೇರು ಸಿಂಗ್ ಸಾಲಂಕಿ (38) ಎಂಬಾತ ಲಾರಿ ಚಾಲನೆ ಮಾಡುತ್ತಿದ್ದ. ಆಗಸ್ಟ್ 26ರಂದು ಮಧ್ಯಾಹ್ನ 12.10ರ ಸುಮಾರಿಗೆ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ವೇಳೆ ಅರಬೈಲ್ ಘಾಟ್ನ ಶಿರಲೆ ಫಾಲ್ಸ್ ಬಸ್ ನಿಲ್ದಾಣದ ಸಮೀಪ ಲಾರಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ತಡೆಗೋಡೆಗೆ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ತಡೆಗೋಡೆ ಒಡೆದು ಹಾನಿಯಾಗಿದ್ದು, ಸುಮಾರು 2 ಲಕ್ಷ ರೂ ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಲಾರಿಗೂ ಹಾನಿಯಾಗಿದ್ದು, ಘಟನೆಗೆ ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.