ಕಾರವಾರ: ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಇಲ್ಲದೇ ಮದ್ಯ ಸೇವಿಸಲು ಅವಕಾಶ ಮಾಡಿಕೊಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಾಳಿ ಗ್ರಾಮದ ಗೊಟ್ನೇಭಾಗದ ಗಾಬಿತವಾಡಾ ನಿವಾಸಿ ದಿಲೀಪ್ ನಾಗೇಶ ಪಾಟೀಲ್ (57) ಪ್ರಕರಣದ ಆರೋಪಿಯಾಗಿದ್ದಾರೆ.
ಆಗಸ್ಟ್ 30ರಂದು ಮಧ್ಯಾಹ್ನ 12.20ರ ಸುಮಾರಿಗೆ ಮಾಜಾಳಿಯ ಗೊಟ್ನೇಭಾಗದ ಶ್ರೀ ಮಹಾದೇವ ಸ್ವಾಮಿ ದೇವಸ್ಥಾನದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯು ಯಾವುದೇ ರೀತಿಯ ಲೈಸನ್ಸ್ ಅಥವಾ ಪರವಾನಗಿ ಇಲ್ಲದೇ, ತನ್ನ ಲಾಭಕ್ಕಾಗಿ ಸಾರ್ವಜನಿಕರಿಗೆ ಮದ್ಯ ಸೇವಿಸಲು ಅವಕಾಶ ಮಾಡಿಕೊಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.
ಚಿತ್ತಾಕುಲಾ ಪೊಲೀಸ್ ಠಾಣೆಯ ಉಪನಿರೀಕ್ಷಕ ಪರಶುರಾಮ ಮಿರ್ಜಗಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ ವೇಳೆ ಆರೋಪಿಯು ಮದ್ಯದೊಂದಿಗೆ ಸಿಕ್ಕಿಬಿದ್ದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.