ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರ, ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಕಾರವಾರದ ವೈದ್ಯಕೀಯ ಕಾಲೇಜಿಗೆ ನಾಮಕರಣ ಮಾಡುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ರಾಮಕೃಷ್ಣ ಹೆಗಡೆ ಅವರು ಮೌಲ್ಯಾಧಾರಿತ ರಾಜಕಾರಣ, ಪ್ರಾಮಾಣಿಕತೆ, ಸರಳತೆ ಹಾಗೂ ಆಡಳಿತದಲ್ಲಿ ಹಲವು ಮಹತ್ವದ ಸುಧಾರಣೆಗಳ ಮೂಲಕ ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಂತಹ ಅಪ್ರತಿಮ ಹಾಗೂ ಸಜ್ಜನಿಕೆಯ ರಾಜಕಾರಣಿಯ ಹೆಸರನ್ನು ವೈದ್ಯಕೀಯ ಕಾಲೇಜಿಗೆ ನಾಮಕರಣ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಗೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣವಾಗಿದೆ ಎಂದು ಹೆಬ್ಬಾರ್ ಹೇಳಿದ್ದಾರೆ.
ರಾಮಕೃಷ್ಣ ಹೆಗಡೆ ಅವರ ಹೆಸರು ವೈದ್ಯಕೀಯ ಕಾಲೇಜಿಗೆ ನಾಮಕರಣಗೊಳ್ಳುವುದರಿಂದ ಅವರ ಆದರ್ಶಗಳು, ಮೌಲ್ಯಗಳು ಹಾಗೂ ಜನಪರ ಆಡಳಿತದ ಪರಂಪರೆ ಮುಂದಿನ ತಲೆಮಾರುಗಳಿಗೂ ಪರಿಚಯವಾಗಲಿದೆ. ಇದು ಅವರ ವ್ಯಕ್ತಿತ್ವ ಮತ್ತು ಸಾಧನೆಗಳಿಗೆ ಸಲ್ಲಿಸುವ ಗೌರವದ ಪ್ರತೀಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಿವರಾಮ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.