ಯಲ್ಲಾಪುರ: ತಾಲೂಕಿನ ನಂದೊಳ್ಳಿ ಪಂಚಾಯಿತಿ ವ್ಯಾಪ್ತಿಯ ಕೋಣೆಮನೆ ಗ್ರಾಮದ ಬಸ್ ನಿಲ್ದಾಣದ ಸಮೀಪ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ನ ಹಿಂಬದಿ ಕುಳಿತಿದ್ದ ಯುವಕನಿಗೆ ಗಂಭೀರ ಗಾಯಗಳಾಗಿರುವ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.16ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ವಿಜಯ ಬಳ್ಳಾರಿ (22) ಎಂಬಾತ ಕೆಎ-65/ಕೆ-8985 ಸಂಖ್ಯೆಯ ಬೈಕ್ನಲ್ಲಿ ಸಾಗರ ಬಾಗೇವಾಡಿ (23) ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಯಲ್ಲಾಪುರದಿಂದ ನಂದೊಳ್ಳಿ ಕಡೆಗೆ ತೆರಳುತ್ತಿದ್ದಾಗ, ಕೋಣೆಮನೆ ಬಸ್ ನಿಲ್ದಾಣ ದಾಟಿದ ಬಳಿಕ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕೆಎ-34/ಪಿ-1668 ಸಂಖ್ಯೆಯ ಕಾರಿಗೆ ಡಿಕ್ಕಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ಸಾಗರ ಬಾಗೇವಾಡಿ ಅವರ ಎರಡೂ ಕಾಲುಗಳ ಎಲುಬು ಹಾಗೂ ಬಲಗೈ ತೋಳಿನ ಭಾಗದ ಎಲುಬು ಮುರಿದಿದ್ದು, ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೈಕ್ ಅನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಗಾಯಾಳುವನ್ನು ಆಸ್ಪತ್ರೆಯಲ್ಲಿ ಉಪಚರಿಸಿದ ನಂತರ ಇಂದು ಸಾಗರ ಕಿವಡೆ ಅವರು ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಿಎಸ್ಐ ಮಹಾವೀರ ಕಾಂಬಳೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.