ಹೊನ್ನಾವರ: ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಸೆಪ್ಟೆಂಬರ್ 2ರಂದು ನಡೆದ ಮೊದಲ ಪ್ರಕರಣದಲ್ಲಿ, ಕುಳಕೋಡ ಗೋಪಾಲಕೃಷ್ಣ ದೇವಸ್ಥಾನ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಅಂಕೆ-ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಕೂಡ್ಲದ ಆಶೀಶ್ ಜೂಜೆ ಅಲ್ಮೇಡಾ (46) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ 800 ರೂ ನಗದು, ಓಸಿ ಚೀಟಿ ಹಾಗೂ ಬಾಲ್ ಪೆನ್ ವಶಪಡಿಸಿಕೊಳ್ಳಲಾಗಿದೆ.
ತನಿಖೆ ವೇಳೆ ಓಸಿ ಜೂಜಾಟದಿಂದ ಸಂಗ್ರಹಿಸಿದ ಹಣ ಹಾಗೂ ಚೀಟಿಗಳನ್ನು ಖರ್ವಾದ ಸಂದೀಪ ನಾಗಪ್ಪ ಗೌಡ ಎಂಬಾತನಿಗೆ ನೀಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬಾಳೆಗದ್ದೆ ವೆಂಕಟರಮಣ ದೇವಸ್ಥಾನದ ಪಕ್ಕದಲ್ಲಿರುವ ಅಂಗಡಿಯೊಂದರ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ 600 ರೂ ನಗದು, ಒಂದು ಬಾಲ್ ಪೆನ್ ಹಾಗೂ ಓಸಿ ಅಂಕೆ-ಸಂಖ್ಯೆ ಬರೆದ ಚೀಟಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪೈಕಿ ಒಬ್ಬರು ಓಸಿ ಮಟಕಾ ಜೂಜಾಟದ ಬುಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆಂಬುದು ಪೊಲೀಸರ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಎರಡೂ ಪ್ರಕರಣಗಳಲ್ಲಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.