ಬನವಾಸಿ: ಗಣೇಶೋತ್ಸವವು ಭಕ್ತಿ ಮತ್ತು ಭಾವೈಕ್ಯತೆಯ ಹಬ್ಬವಾಗಿದ್ದು, ಎಲ್ಲ ಸಮುದಾಯಗಳ ಭಾವನೆಗಳನ್ನು ಗೌರವಿಸಿ ಪರಸ್ಪರ ಸಹಕಾರದೊಂದಿಗೆ ಹಬ್ಬ ಆಚರಿಸುವ ಮೂಲಕ ಶಾಂತಿ ಹಾಗೂ ಸೌಹಾರ್ದತೆಯ ಪರಂಪರೆಯನ್ನು ಮುಂದುವರಿಸಬೇಕು ಎಂದು ಬನವಾಸಿ ಪಿಎಸ್ಐ ಮಹಾಂತಪ್ಪ ಕುಂಬಾರ ಮನವಿ ಮಾಡಿದರು.
ಪೊಲೀಸ್ ಇಲಾಖೆಯ ವತಿಯಿಂದ ಗುರುವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಗಳೊಂದಿಗೆ ಪೊಲೀಸ್ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಮೆರವಣಿಗೆ ವೇಳೆ ಡಿಜೆ ಬಳಕೆ, ಅತಿಯಾದ ಶಬ್ದ, ಸಂಚಾರಕ್ಕೆ ತೊಂದರೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯ ವರ್ತನೆಗೆ ಅವಕಾಶ ನೀಡಬಾರದು. ಗ್ರಾಮದ ಹಿರಿಯರ ಸಲಹೆ ಪಡೆದು ನಿಗದಿತ ಸಮಯ ಹಾಗೂ ನಿಯಮಗಳನ್ನು ಪಾಲಿಸುವ ಮೂಲಕ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ತಿಳಿಸಿದರು.
ತನಿಖಾ ಪಿಎಸ್ಐ ರವೀಂದ್ರ ಬಿರಾದಾರ ಮಾತನಾಡಿ, ಯುವಕರು ಉತ್ಸವದ ಉತ್ಸಾಹದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಯಾವುದೇ ಸಣ್ಣಪುಟ್ಟ ಗೊಂದಲ ಉಂಟಾದರೂ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಥವಾ ಸುಳ್ಳು ಸಂದೇಶಗಳನ್ನು ಹರಡುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದರು.
ಗಣೇಶೋತ್ಸವವನ್ನು ಶಾಂತಿ, ಸೌಹಾರ್ದ ಹಾಗೂ ಸಂಭ್ರಮದಿಂದ ಆಚರಿಸಬೇಕು. ಸಾರ್ವಜನಿಕ ಕ್ಷೇತ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಘಟನೆಗಳು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಕೆಇಬಿ ಇಲಾಖೆಯ ಸಿಬ್ಬಂದಿ ಷಣ್ಮುಖ ಮಾತನಾಡಿದರು. ಸಭೆಯಲ್ಲಿ ವಿವಿಧ ಗ್ರಾಮಗಳ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಪೊಲೀಸ್ ಸಿಬ್ಬಂದಿ ಕುಮಾರ್ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ವರದಿ: ಸುಧೀರ್ ನಾಯರ್, ಬನವಾಸಿ