ಕಾರವಾರ: ಎಂದಿನಂತೆ ಕಚೇರಿಗೆ ಆಗಮಿಸಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಒಬ್ಬರು ದಿಢೀರ್ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಗಳವಾರ ಕಾರವಾರ ನಗರದಲ್ಲಿ ನಡೆದಿದೆ.
ಕಾರವಾರ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಂಡರೀನಾಥ ವಿ. ನಾಯ್ಕ (52) ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಫಂಡರೀನಾಥ ನಾಯ್ಕ ಅವರು ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.
ನಾಯ್ಕ ಅವರು ದಿಢೀರ್ ಕುಸಿದುಬಿದ್ದಿರುವುದನ್ನು ಕಂಡ ಕಚೇರಿ ಸಿಬ್ಬಂದಿ ಆತಂಕಗೊಂಡಿದ್ದಾರೆ. ಸಮಯ ವ್ಯರ್ಥ ಮಾಡದೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದು, ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರ ಜೀಪ್ನಲ್ಲೇ ಫಂಡರೀನಾಥ ನಾಯ್ಕ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲ. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಕಚೇರಿಯಲ್ಲೇ ನಡೆದ ಈ ಘಟನೆ ಕೆಲಕಾಲ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಿಸಿತು. ಕೆಲವೇ ಕ್ಷಣಗಳ ಹಿಂದೆ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬರು ದಿಢೀರ್ ಆಸ್ಪತ್ರೆಗೆ ದಾಖಲಾಗುವ ಸ್ಥಿತಿಗೆ ತಲುಪಿ, ಬಳಿಕ ಮೃತಪಟ್ಟಿರುವುದು ಸಹೋದ್ಯೋಗಿಗಳು ಹಾಗೂ ಪರಿಚಿತರಲ್ಲಿ ಅಪಾರ ಶೋಕ ಮೂಡಿಸಿದೆ.
ಫಂಡರೀನಾಥ ವಿ. ನಾಯ್ಕ ಅವರ ಅಕಾಲಿಕ ನಿಧನಕ್ಕೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದು, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.