ಯಲ್ಲಾಪುರ: ಪ್ರಜಾಪ್ರಭುತ್ವ ಎಂದರೆ ಕೇವಲ ಮತ ಚಲಾಯಿಸುವುದಷ್ಟೇ ಅಲ್ಲ. ದೇಶದ ಆಡಳಿತ ವ್ಯವಸ್ಥೆ ಹೇಗೆ ನಡೆಯುತ್ತದೆ, ಸಂವಿಧಾನ ನಮಗೆ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳೇನು ಎಂಬುದನ್ನು ತಿಳಿದುಕೊಳ್ಳುವುದೂ ಅಷ್ಟೇ ಮುಖ್ಯ. ಈ ಅರಿವು ಯುವಜನತೆಯಲ್ಲಿ ಮೂಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಯಲ್ಲಾಪುರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನತೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.
ಯುವ ಸಂಸತ್ತಿನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಕೇವಲ ವೇದಿಕೆಯ ಅನುಭವ ನೀಡುವುದಷ್ಟೇ ಅಲ್ಲದೆ, ಸಂವಿಧಾನ, ಸಂಸದೀಯ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ಕಾರ್ಯವಿಧಾನವನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗುತ್ತವೆ.
ಚರ್ಚೆ, ವಿಚಾರ ವಿನಿಮಯ, ತಮ್ಮ ಅಭಿಪ್ರಾಯವನ್ನು ಮಂಡಿಸುವುದು ಮತ್ತು ಇತರರ ಅಭಿಪ್ರಾಯಗಳನ್ನು ಆಲಿಸುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದ ಶಾಸಕ ಹೆಬ್ಬಾರ್, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.