ಕಾರವಾರ: ತಾಲೂಕಿನ ಕಡವಾಡದಲ್ಲಿ ಹಗಲು-ರಾತ್ರಿ ಎನ್ನದೆ ಪದೇಪದೇ ವಿದ್ಯುತ್ ಕಡಿತವಾಗುತ್ತಿರುವುದಕ್ಕೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ವಿವಿಧೆಡೆ ಕೆಳಮಟ್ಟಕ್ಕೆ ವಾಲಿಕೊಂಡಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿಯೂ ಪದೇಪದೇ ವಿದ್ಯುತ್ ಕಡಿತವಾಗಿದ್ದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮನೆಗಳು ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಫ್ರಿಡ್ಜ್ನಲ್ಲಿ ಸಂಗ್ರಹಿಸಿಟ್ಟಿರುವ ಹಾಲು, ತರಕಾರಿ ಸೇರಿದಂತೆ ವಿವಿಧ ಸಾಮಗ್ರಿಗಳು ವಿದ್ಯುತ್ ಕಡಿತದಿಂದ ಹಾಳಾಗುತ್ತಿವೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ ಆರೋಪಿಸಿದ್ದಾರೆ.
ಇದರ ಜೊತೆಗೆ ಕಡವಾಡದ ಶಾಂಬಾವಾಡ, ಹಳೇಕೋಟ, ಕುಂಬಾರವಾಡ, ಗುನಗಿವಾಡ ಸೇರಿದಂತೆ ವಿವಿಧ ಭಾಗಗಳಲ್ಲಿ, ರಸ್ತೆ ಹಾಗೂ ಶಾಲೆಯ ಸಮೀಪ ಹಲವೆಡೆ ವಿದ್ಯುತ್ ತಂತಿಗಳು ಕೆಳಮಟ್ಟಕ್ಕೆ ವಾಲಿಕೊಂಡಿವೆ. ಈ ತಂತಿಗಳಿಂದ ಯಾವುದೇ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ತಂತಿಗಳನ್ನು ಸೂಕ್ತ ಎತ್ತರಕ್ಕೆ ಕಟ್ಟಿ ಸರಿಪಡಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಿಶೋರ ಕಡವಾಡಕರ ಅಧಿಕಾರಿಗಳ ಗಮನಕ್ಕೆ ತಂದರು.
ಗ್ರಾಮದ ವಿವಿಧೆಡೆ ಎದುರಾಗುತ್ತಿರುವ ವಿದ್ಯುತ್ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದು ಆರ್.ನಾಯ್ಕ ಅವರು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಹುತಾತ್ಮ ವೀರಯೋಧ ವಿನೋದ ನಾಯ್ಕ ಅವರ ತಂದೆ ಮಹಾದೇವ ಡಿ. ನಾಯ್ಕ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ, ಗ್ರಾಮ ಪಂಚಾಯಿತಿ ಸದಸ್ಯ ಕಿಶೋರ ಕಡವಾಡಕರ, ಮಾಜಿ ಅಧ್ಯಕ್ಷ ಆನಂದು ಆರ್.ನಾಯ್ಕ ಹಾಗೂ ಪ್ರದೀಪ ಕಡವಾಡಕರ ಉಪಸ್ಥಿತರಿದ್ದರು.