ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ಭೀಮ್ ಸೇನೆ ವತಿಯಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಮಹಿಳಾಧ್ಯಕ್ಷೆ ಪದ್ಮಾವತಿ ತಿಳಿಸಿದರು.
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮರಣಾರ್ಥ ಹಾಗೂ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಸಂಘದ ವತಿಯಿಂದ ಇದೇ ಫೆ. 23ರಂದು ಮೈಸೂರಿನ ಪುರಭವನದ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಂಘವು ಸ್ಥಾಪನೆಯಾದ ದಿನದಿಂದ ಸಾಮಾಜಿಕ ಹೋರಾಟಗಳನ್ನು ಮಾಡುತ್ತ ನೊಂದವರ ಪರವಾಗಿ ನಿಂತಿದೆ. ರೈತರ, ಮಹಿಳೆಯರ ಮತ್ತು ಕಾರ್ಮಿಕರ ಏಳಿಗೆಗಾಗಿ ಸಂಘವು ಸದಾ ಶ್ರಮಿಸುತ್ತಿದೆ. ಶೈಕ್ಷಣಿಕ ಅಭಿವೃದ್ಧಿಯ ಉದ್ದೇಶಕ್ಕಾಗಿ ಉತ್ತಮ ಶಿಕ್ಷಣವನ್ನು ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿದ್ದೇವೆ ಮತ್ತು ನಿವೃತ್ತ ಸೈನಿಕರು, ಪತ್ರಕರ್ತರಿಗೆ ಭೀಮ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದೇವೆ. ಅಲ್ಲದೆ ಸಮಾಜದಲ್ಲಿ ಉತ್ತಮ ಸಾಮಾಜಿಕ ವ್ಯವಸ್ಥೆಯನ್ನು ರೂಪಿಸಲು ಸಂಘವು ತನ್ನದೇ ಆದ ಚಳುವಳಿಗಳನ್ನು ರೂಪಿಸಿಕೊಂಡಿದೆ ಎಂದರು.
ಈ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಅಧ್ಯಕ್ಷ ಸರ್ವೇಶ್, ಗೌರವಾಧ್ಯಕ್ಷ ಶಿವಕುಮಾರ್, ರಾಜ್ಯ ಯುವ ಘಟಕ ಅಧ್ಯಕ್ಷ ಮೋಹನ್ ಕುಮಾರ್, ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷ ನಯಾಜ್ ಪಾಷಾ, ರಾಜ್ಯ ಕಾರ್ಯಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಸಂಘದ ಇತರೆ ಪದಾಧಿಕಾರಿಗಳು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘದ ರಾಜ್ಯ ಕಾರ್ಯದರ್ಶಿ ಹಿಟ್ನಳ್ಳಿ ದೇವರಾಜ್, ಜಿಲ್ಲಾ ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ನವಿಲೂರು ಶೇಖರ್, ಕಾರ್ಯದರ್ಶಿ ಅಶೋಕ್, ರಾಮಕೃಷ್ಣ, ರಾಮ, ಮಾದೇವಿ ಉಪಸ್ಥಿತರಿದ್ದರು.
- ವರದಿ: ಪ್ರಸನ್ನ ಕುಮಾರ್